ತಿರುಚಿ: ತಮಿಳುನಾಡಿನ ಮದ್ದು ಗುಂಡು ಮತ್ತು ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, 10 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಗುರುವಾರ ನಡೆದಿದೆ.
ತಿರುಚನಾಪಲ್ಲಿಯ ತುರೈಯೂರ್ ನಲ್ಲಿರುವ ಮುರುಂಗಪಟ್ಟಿ ಗ್ರಾಮದಲ್ಲಿರುವ ಸ್ಫೋಟಕ ತಯಾರಿಕಾ ಕಾರ್ಖಾನೆಯಲ್ಲಿ ಇಂದು ಬೆಳಿಗ್ಗೆ 7.25ರ ಸುಮಾರಿಗೆ ಸ್ಫೋಟ ಸಂಭವಿಸಿದೆ. ಪರಿಣಾಮ ಕಾರ್ಖಾನೆಯಲ್ಲಿ ಬೆಳಗಿನ ಪಾಳಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ 10 ಸಜೀವ ದಹನವಾಗಿದ್ದು, 15ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
6 ಗಂಟೆಯಿಂದ ಕಾರ್ಖಾನೆಯಲ್ಲಿ ಕೆಲಸ ಆರಂಭವಾಗುತ್ತದೆ. ಕಾರ್ಮಿಕರು ಕೆಲಸ ಆರಂಭಿಸಿದ ಕೇವಲದ ಅರ್ಧ ಗಂಟೆಯಲ್ಲಿ ಮಹಡಿಯೊಂದರಲ್ಲಿ ಭಾರೀ ಪ್ರಮಾಣದಲ್ಲಿ ಸ್ಫೋಟ ಸಂಭವಿಸಿದ ಶಬ್ಧ ಕೇಳಿಬಂದಿದೆ. ಶಬ್ಧ ಕೇಳಿದ ಕೂಡಲೇ ಗ್ರಾಮಸ್ಥರು ಸ್ಥಳಕ್ಕೆ ಓಡಿ ಬಂದಿದ್ದಾರೆ. ಕೂಡಲೇ ಅಗ್ನಿ ಶಾಮಕ ದಳ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ.
10ಕ್ಕೂ ಹೆಚ್ಚು ಅಗ್ನಿ ಶಾಮಕ ದಳದ ವಾಹನಗಳು ಸ್ಥಳಕ್ಕಾಗಮಿಸಿ ಬೆಂಕಿ ನಂದಿಸುವ ಕಾರ್ಯಾಚರಣೆಯನ್ನು ನಡೆಸುತ್ತಿದೆ. ಬೆಂಕಿ ನಂದಿಸಲು ಸಿಬ್ಬಂದಿಗಳು ಹರಸಾಹಸ ಪಡುತ್ತಿದ್ದು, ಮೃತ ದೇಹಗಳನ್ನು ತಿರುಚಿಯ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
Advertisement