ನವದೆಹಲಿ: ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಉಗ್ರ ನೆಲೆಗಳ ಮೇಲೆ ಭಾರತೀಯ ಸೇನೆ ನಡೆಸಿದ ಸೀಮಿತ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳಲು ಹವಣಿಸುತ್ತಿರುವ ಪಾಕಿಸ್ತಾನದ ಉಗ್ರರು ಇದೀಗ ಭಾರತದ ಗಡಿ ಪ್ರವೇಶಿಸಲು ಪ್ಯಾರಾಚೂಟ್ ಬಳಕೆ ಮಾಡುತ್ತಿದ್ದಾರೆಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದೆ.
ಸೀಮಿತ ದಾಳಿ ನಂತರ ಪಾಕ್ ಗಡಿಯಲ್ಲಿಯೇ ಹದ್ದುಗಳಂತೆ ಕಾದು ಕುಳಿತಿರುವ ಉಗ್ರರು, ಭಾರತದ ಗಡಿ ಪ್ರವೇಶಿಸಲು ಸತತವಾಗಿ ಯತ್ನ ನಡೆಸುತ್ತಿದ್ದಾರೆ. ಅಲ್ಲದೆ, ಪ್ಯಾರಾಚೂಟ್ ಮೂಲಕ ಗಡಿ ಪ್ರವೇಶಿಸಲು ಯೋಜನೆ ರೂಪಿಸಿದ್ದು, ಭಾರತದಲ್ಲಿ ಫಿದಾಯಿನ್ (ಆತ್ಮಹತ್ಯಾ) ದಾಳಿ ನಡೆಸಲು ಸಂಚು ರೂಪಿಸಿದ್ದಾರೆಂದು ಅಧಿಕಾರಿಗಳಿಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂದು ತಿಳಿದುಬಂದಿದೆ.
ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವುದನ್ನು ಸ್ವತಃ ಗುಜರಾತ್ ರಾಜ್ಯದ ಉನ್ನತ ಅಧಿಕಾರಿಯೊಬ್ಬರು ಖಚಿತ ಪಡಿಸಿದ್ದಾರೆನ್ನಲಾಗಿದೆ. ಪಾಕಿಸ್ತಾನದ ಲಷ್ಕರ್-ಇ-ತೊಯ್ಬಾ ಉಗ್ರ ಸಂಘಟನೆ ಭಾರತದಲ್ಲಿ ವಿಧ್ವಂಸಕ ಕೃತ್ಯವೆಸಗಲು ಈಗಾಗಲೇ ಯೋಜನೆ ರೂಪಿಸಿದೆ ಎಂದು ತಿಳಿದುಬಂದಿದೆ.
ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಆಗಸದಲ್ಲಿ ಹಾರುವ ಚಟುವಟಿಕೆಗಳಿಗೆ ನಿಷೇಧ ಹೇರಲಾಗಿದೆ. ಅಲ್ಲದೆ, ದೇಶದಾದ್ಯಂತ ತೀವ್ರ ಕಟ್ಟೆಚ್ಚರ ಘೋಷಿಸಲಾಗಿದೆ. ಪ್ರಮುಖವಾಗಿ ಗಡಿ ಪ್ರದೇಶಗಳಲ್ಲಿ ಹೈಅಲರ್ಟ್'ನ್ನು ಮುಂದುವರೆಸಲಾಗುತ್ತಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement