ಆಸ್ಪತ್ರೆ ಅಗ್ನಿ ದುರಂತ: ತನಿಖೆಗೆ ಆದೇಶಿಸಿದ ಒಡಿಶಾ ಮುಖ್ಯಮಂತ್ರಿ

ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಂಗಳವಾರ ತನಿಖೆಗೆ...
ಆಸ್ಪತ್ರೆ ಅಗ್ನಿ ದುರಂತ: ತನಿಖೆಗೆ ಆದೇಶಿಸಿದ ಒಡಿಶಾ ಮುಖ್ಯಮಂತ್ರಿ
ಆಸ್ಪತ್ರೆ ಅಗ್ನಿ ದುರಂತ: ತನಿಖೆಗೆ ಆದೇಶಿಸಿದ ಒಡಿಶಾ ಮುಖ್ಯಮಂತ್ರಿ

ಭುವನೇಶ್ವರ: ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಅಗ್ನಿ ದುರಂತ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು ಮಂಗಳವಾರ ತನಿಖೆಗೆ ಆದೇಶಿಸಿದ್ದಾರೆ.

ಪ್ರಕರಣವನ್ನು ತನಿಖೆ ನಡೆಸುವ ಸಲುವಾಗಿ ಕಂದಾಯ ವಿಭಾಗೀಯ ಆಯುಕ್ತ (ಆರ್'ಡಿಸಿ) ನೇತೃತ್ವದ ಮೂರು ಸದಸ್ಯ ತಂಡವನ್ನು ಒಡಿಶಾ ಸರ್ಕಾರ ನೇಮಿಸಿದ್ದು, ಆಸ್ಪತ್ರೆಯ ಆಡಳಿತ ಮಂಡಳಿಯ ನಿರ್ಲಕ್ಷ್ಯ ಅಥವಾ ತಪ್ಪೇನಾದರೂ ಕಂಡು ಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ರಾಜ್ಯ ಆರೋಗ್ಯ ಸಚಿವ ಅತನು ಎಸ್ ನಾಯಕ್ ಅವರು ಹೇಳಿದ್ದಾರೆ.

ಘಟನೆಗೆ ತೀವ್ರ ವಿಷಾದ ವ್ಯಕ್ತಪಡಿಸಿರುವ ಒಡಿಶಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರು, ದುರ್ಘಟನೆಯಲ್ಲಿ ಸಾವನ್ನಪ್ಪಿದ್ದವರಿಗೆ ಸಂತಾಪವನ್ನು ಸೂಚಿಸುತ್ತೇನೆ. ಈಗಾಗಲೇ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯಕೀಯ ಹಾಗೂ ಚಿಕಿತ್ಸೆ ಕುರಿತಂತೆ ಪರಿಶೀಲನೆ ನಡೆಸಲಾಗಿದೆ ಎಂದು ಹೇಳಿದ್ದಾರೆ.

ಗಾಯಾಳುಗಳ ಚಿಕಿತ್ಸೆ ಕುರಿತಂತೆ ಪ್ರಧಾನುಮಂತ್ರಿ ನರೇಂದ್ರ ಮೋದಿಯವರಿಗೆ ವಿವರಣೆ ನೀಡಲಾಗಿದ್ದು, ಹಿರಿಯ ಸಚಿವರ ಹಾಗೂ ಅಧಿಕಾರಿಗಳು ಎಲ್ಲವನ್ನೂ ನೋಡಿಕೊಳ್ಳುತ್ತಿದ್ದಾರೆ. ಪ್ರಕರಣವನ್ನು ಈಗಾಗಲೇ ತನಿಖೆಗೆ ಆದೇಶಿಸಲಾಗಿದೆ. ಕಂದಾಯ ವಿಭಾಗೀಯ ಆಯುಕ್ತರ ನೇತೃತ್ವದಲ್ಲಿ ತನಿಖೆ ನಡೆಯಲಿದೆ. ದುರ್ಘಟನೆಯಲ್ಲಿ ಗಾಯಗೊಂಡ ಗಾಯಾಳುಗಳ ಚಿಕಿತ್ಸೆಯ ವೆಚ್ಚವನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಲಿದ್ದು, ಮುಖ್ಯಮಂತ್ರಿ ಪರಿಹಾರ ಧನವನ್ನು ಬಳಸಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ಒಡಿಶಾದ ರಾಜಧಾನಿ ಭುವನೇಶ್ವರದಲ್ಲಿರುವ ಖಾಸಗಿ ಆಸ್ಪತ್ರೆಯೊಂದರಲ್ಲಿ ಅಗ್ನಿ ದುರಂತ ಸಂಭವಿಸಿತ್ತು. ಆಸ್ಪತ್ರೆಯ ಎರಡನೇ ಮಹಡಿಯಲ್ಲಿರುವ ಡಯಾಲಿಸಿಸ್ ಘಟಕದಲ್ಲಿ ಬೆಂಕಿ ಕಾಣಿಸಿಕೊಂಡು, ಬೆಂಕಿಯ ಕೆನ್ನಾಲಿಗೆ ತುರ್ತು ಚಿಕಿತ್ಸಾ ಫಟಕಕ್ಕೂ ವ್ಯಾಪಿಸಿತ್ತು. ಪರಿಣಾಮ ಘಟನೆಯಲ್ಲಿ 24 ಮಂದಿ ಸಾವನ್ನಪ್ಪಿ, ನೂರಕ್ಕೂ ಹೆಚ್ಚು ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com