ಕೊಯಂಬತ್ತೂರು: ಕಾವೇರಿ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನಾಲ್ಕು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಆದೇಶಿಸಿರುವುದನ್ನು ತಮಿಳುನಾಡು ರೈತ ಸಂಘಟನೆಗಳ ಒಕ್ಕೂಟ(ಎಫ್ ಟಿಎಎ) ಬುಧವಾರ ಸ್ವಾಗತಿಸಿದೆ.
ಹಾರಂಗಿ, ಕಬಿನಿ, ಹೇಮಾವತಿ ಮತ್ತು ಕೆಆರ್ಎಸ್ ಜಲಾಶಯಗಳಲ್ಲಿ ಕರ್ನಾಟಕ ಪಾಲು ಎಷ್ಟು ಮತ್ತು ಎಷ್ಟು ನೀರು ಸಂಗ್ರಹಿಸಬೇಕು ಎಂಬುದರ ಬಗ್ಗೆ ಕಾವೇರಿ ನಿರ್ವಹಣಾ ಮಂಡಳಿ ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಎಫ್ ಟಿಎಎ ಕಾರ್ಯದರ್ಶಿ ಎಸ್.ನಲ್ಲಸಾಮಿ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅದೇ ರೀತಿ ಮೆಟ್ಟೂರು ಜಲಾಶಯದಲ್ಲೂ ತಮಿಳುನಾಡಿನ ಪಾಲು ಎಷ್ಟು ಮತ್ತು ಗರಿಷ್ಠ ಎಷ್ಟು ನೀರು ಸಂಗ್ರಹಿಸಬೇಕು ಎಂಬುದರ ಬಗ್ಗೆಯೂ ಕ್ರಮ ತೆಗೆದುಕೊಳ್ಳಬೇಕು ಎಂದು ಅವರು ಸಲಹೆ ನೀಡಿದ್ದಾರೆ.
ನಿನ್ನೆ ಕಾವೇರಿ ನೀರಿಗಾಗಿ ತಮಿಳುನಾಡು ಸಲ್ಲಿಸಿದ್ದ ಮಧ್ಯಂತರ ಅರ್ಜಿಯ ವಿಚಾರಣೆ ನಡೆಸಿದ್ದ ಸುಪ್ರೀಂ ಕೋರ್ಟ್, ನೀರು ಹಂಚಿಕೆಗೆ ಸಂಬಂಧಿಸಿದಂತೆ ಮುಂದಿನ ನಾಲ್ಕು ವಾರಗಳಲ್ಲಿ ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡುವಂತೆ ಆದೇಶಿಸಿತ್ತು.