ಒಡಿಶಾ: ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ- 2 ಸಾವು, 13 ಜನರಿಗೆ ಗಾಯ
ಭುವನೇಶ್ವರ: ಪಟಾಕಿ ತಯಾರಿಕಾ ಕಾರ್ಖಾನೆಯೊಂದರಲ್ಲಿ ಸ್ಫೋಟವೊಂದು ಸಂಭವಿಸಿದ್ದು, ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿ 13ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ಘಟನೆ ಒಡಿಶಾದ ನಯಗರ್ಹ್'ನಲ್ಲಿ ಶುಕ್ರವಾರ ನಡೆದಿದೆ.
ನಯಗರ್ಹ್ ಟೌನ್ ನ 4 ಕಿ.ಮೀ ಹತ್ತಿರದಲ್ಲಿ ಪಟಾಕಿ ಕಾರ್ಖಾನೆಯಿದ್ದು, ಕಾರ್ಖಾನೆಯಲ್ಲಿ ಪಟಾಕಿಗಳನ್ನು ತಯಾರು ಮಾಡಲಾಗುತ್ತಿತ್ತು. ನಿನ್ನೆ ಮಧ್ಯಾಹ್ನ ಕಾರ್ಖಾನೆಯಲ್ಲಿ ಕೆಲಸ ಎಂದಿನಂತೆ ನಡೆಸಲಾಗುತ್ತಿತ್ತು. ಆದರೆ, ಇದ್ದಕ್ಕಿದ್ದಂತೆ ಕಾರ್ಖಾನೆಯ ಕೊಠಡಿಯೊಂದರಲ್ಲಿ ಭಾರಿ ಮಟ್ಟದಲ್ಲಿ ಸ್ಫೋಟವೊಂದು ಸಂಭವಿಸಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಅಲ್ಲದೆ, 13 ಮಂದಿ ಗಾಯಗೊಂಡಿದ್ದಾರೆಂದು ತಿಳಿದುಬಂದಿದೆ.
ಘಟನೆ ವೇಳೆ 7 ಮಂದಿ ಗಂಭೀರವಾಗಿ ಗಾಯಗೊಂಡಿದ್ದು, ಶೇ.80 ರಷ್ಟು ದೇಹದಲ್ಲಿ ಸುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಎಸ್ ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಘಟನೆ ಆಕಸ್ಮಿಕವಾಗಿ ನಡೆದಿರಬಹುದೆಂದು ಪ್ರಾಥಮಿಕ ತನಿಖೆ ವೇಳೆಯಲ್ಲಿ ತಿಳಿದುಬಂದಿದೆ,
ಕಾರ್ಖಾನೆಯ ಅವಶೇಷಗಳಲ್ಲಿ ಇನ್ನೂ ಕೆಲವರು ಸಿಲುಕಿಕೊಂಡಿರುವ ಶಂಕೆಗಳು ವ್ಯಕ್ತವಾಗುತ್ತಿದ್ದು, ಸ್ಥಳಕ್ಕಾಗಮಿಸಿರುವ ಅಗ್ನಿ ಶಾಮಕ ದಳದ ಸಿಬ್ಬಂದಿಗಳು ಕಾರ್ಯಾಚರಣೆಯನ್ನು ನಡೆಸುತ್ತಿದ್ದಾರೆ.
ಪ್ರಸ್ತುತ ಪರಿಸ್ಥಿತಿ ನಿಯಂತ್ರಣದಲ್ಲಿದೆ. ಅಗ್ನಿಶಾಮಕ ದಳದ ಸಿಬ್ಬಂದಿಗಳು ತಮ್ಮ ಕಾರ್ಯಾಚರಣೆಗಳನ್ನು ಮುಂದುವರೆಸುತ್ತಿವೆ ಎಂದು ಅಗ್ನಿಶಾಮಕ ದಳ ಅಧಿಕಾರಿ ಬಿನಾಯ್ ಬೆಹೆರಾ ಅವರು ಹೇಳಿದ್ದಾರೆ.
ಪಟಾಕಿ ಕಾರ್ಖಾನೆ ನಡೆಸಲು ಪರವಾನಗಿಯನ್ನು ಪಡೆಯಲಾಗಿದೆ. ಆದರೂ, ಪರಿಶೀಲನೆ ನಡೆಸಲಾಗುತ್ತಿದೆ ಎಂದು ಎಸ್ ಪಿ. ಕೆ. ವಿಶಾಲ್ ಸಿಂಗ್ ಅವರು ಹೇಳಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ