ಬೆಂಗಳೂರು: ಕಾವೇರಿ ಕುರಿತಂತೆ ಪ್ರತೀ ಬಾರಿಯೂ ನಮ್ಮ ವಿರುದ್ಧವೇ ಸುಪ್ರೀಂಕೋರ್ಟ್ ತೀರ್ಪು ನೀಡುತ್ತಿರುವುದು ದುರಾದೃಷ್ಟಕರ ಸಂಗತಿ ಎಂದು ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಅವರು ಶನಿವಾರ ಹೇಳಿದ್ದಾರೆ.
ನಮ್ಮಲ್ಲಿ ನೀರಿಲ್ಲ ಎಂದು ಸುಪ್ರೀಂಕೋರ್ಟ್ ಗೆ ಈ ಹಿಂದಿನಿಂದಲೂ ಹೇಳುತ್ತಲೇ ಬಂದಿದ್ದೇವೆ. ಪ್ರಸ್ತುತ ಇರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ತೀರ್ಮಾನಿಸಲಾಗಿದೆ. ಆದರೆ, ನಮ್ಮ ಮನವಿಯನ್ನು ಕೇಳುವುದರಲ್ಲಿ ಸುಪ್ರೀಂಕೋರ್ಟ್ ವಿಫಲವಾಗುತ್ತಿದೆ. ಮತ್ತೆ ತಮಿಳುನಾಡಿಗೆ ನೀರು ಬಿಡುಗಡೆ ಮಾಡುವಂತೆ ಆದೇಶ ಹೊರಡಿಸಿದೆ. ಇದು 6ನೇ ಬಾರಿ ಸುಪ್ರೀಂಕೋರ್ಟ್ ಕರ್ನಾಟಕದ ವಿರುದ್ಧ ತೀರ್ಪು ನೀಡುತ್ತಿರುವುದು ಎಂದು ಹೇಳಿದ್ದಾರೆ.
ಇಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರೂ ಕೂಡ ಕಾವೇರಿಗಾಗಿ ಉಪವಾಸ ಸತ್ಯಾಗ್ರಹವನ್ನು ಮಾಡುತ್ತಿದ್ದಾರೆ. ಕರ್ನಾಟಕ ಹಿತಾಸಕ್ತಿಗಾಗಿ ಎಲ್ಲಾ ಪಕ್ಷಗಳು ಒಗ್ಗೂಡಿದೆ ಎಂಬುದು ಇದರಿಂದ ಸಾಬೀತಾಗುತ್ತಿದೆ.
ಸುಪ್ರೀಂ ಆದೇಶ ಕುರಿತಂತೆ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. ಸಭೆ ಬಳಿಕ ಅಂತಿಮ ನಿರ್ಧಾರವನ್ನು ಕೈಗೊಳ್ಳಲಾಗುತ್ತದೆ. ಎಲ್ಲಾ ಬೆಳವಣಿಗೆಗಳ ಬಗ್ಗೆಯೂ ಸಭೆಯಲ್ಲಿ ಚರ್ಚೆ ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
Advertisement