2008 ಮಾಲೇಗಾಂವ್ ಸ್ಫೋಟ ಪ್ರಕರಣ: ಬಾಂಬೇ ಹೈಕೋರ್ಟ್ ನಿಂದ ಸಾಧ್ವಿ ಪ್ರಗ್ಯಾಗೆ ಜಾಮೀನು!

2008ರ ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಧ್ವಿ ಪ್ರಗ್ಯಾ ಠಾಕೂರ್ ಅವರಿಗೆ ಮಂಗಳವಾರ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಮುಂಬೈ: 2008ರ ಮಾಲೇಗಾಂವ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಸಾಧ್ವಿ ಪ್ರಗ್ಯಾ ಠಾಕೂರ್ ಅವರಿಗೆ ಮಂಗಳವಾರ ಬಾಂಬೇ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ.

ಐದು ಲಕ್ಷ ರು.ಗಳ ಬಾಂಡ್ ನೀಡಿ ಜಾಮೀನು ಪಡೆಯುವಂತೆ ಹೈಕೋರ್ಟ್ ಸೂಚನೆ ನೀಡಿದ್ದು, ಹೈಕೋರ್ಟ್ ನ್ಯಾಯಮೂರ್ತಿ ರಂಜಿತ್ ನೇತೃತ್ವದ ಪೀಠ ಇಂದು ಜಾಮೀನು ಮಂಜೂರು ಮಾಡಿದೆ. 2016ರಲ್ಲೇ ಸಾಧ್ವಿ ಪ್ರಗ್ಯಾ  ಠಾಕೂರ್ ಅವರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದರಾದರೂ ನ್ಯಾಯಾಲಯ ಜಾಮೀನು ನಿರಾಕರಿಸಿತ್ತು. ಹೀಗಾಗಿ ಠಾಕೂರ್ ಅವರು ಹೈಕೋರ್ಟ್ ಮೊರೆ ಹೋಗಿದ್ದರು.

2016ರ ಆಗಸ್ಟ್ ತಿಂಗಳನಲ್ಲಿ ವಿಚಾರಣೆಯಲ್ಲಿ ಪ್ರಕರಣದ ವಿಚಾರಣೆ ನಡೆಸಿದ್ದ ಎನ್ಐಎ ಸಾಧ್ವಿ ಪ್ರಗ್ಯಾ ಠಾಕೂರ್ ಅವರ ವಿರುದ್ಧ ಆರೋಪಗಳನ್ನು ಕೈಬಿಟ್ಟಿತ್ತು. ಠಾಕೂರ್ ಅವರ ವಿರುದ್ಧದ ಆರೋಪಗಳಿಗೆ ಸಂಬಂಧಿಸಿದಂತೆ  ನ್ಯಾಯಾಲಯಕ್ಕೆ ಸೂಕ್ತ ಸಾಕ್ಷ್ಯಾಧಾರಗಳನ್ನು ಒದಗಿಸಲು ಎನ್ ಐಎ ವಿಫಲವಾಗಿತ್ತು.  ಹೀಗಿದ್ದೂ ನ್ಯಾಯಾಲಯ ಸಾಧ್ವಿ ಪ್ರಗ್ಯಾ ಠಾಕೂರ್ ಅವರಿಗೆ ಜಾಮೀನು ನಿರಾಕರಿಸಿತ್ತು. ಆದರೆ ಇತ್ತೀಚೆಗೆ ನಡೆದ ವಿಚಾರಣೆ ವೇಳೆ ಎನ್ ಐಎ  ಅಧಿಕಾರಿಗಳು ಜಾಮೀನು ನೀಡಲು ತಮಗಾವುದೇ ತಕರಾರು ಇಲ್ಲ ಎಂದು ಕೋರ್ಟ್ ಗೆ ಹೇಳಿದ್ದರಿಂದ ನ್ಯಾಯಾಲಯ ಇಂದು ಸಾಧ್ವಿ ಪ್ರಗ್ಯಾ ಠಾಕೂರ್ ಅವರಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ.

ತಮ್ಮ ಪಾಸ್ ಪೋರ್ಟ್ ಅನ್ನು ಅಧಿಕಾರಿಗಳ ವಶಕ್ಕೆ ನೀಡುವಂತೆ, ದೇಶ ಬಿಟ್ಟು ತೆರಳದಂತೆ, ಯಾವುದೇ ಕಾರಣಕ್ಕೂ ಸಾಕ್ಷ್ಯಾಧಾರಗಳ ಮೇಲೆ ಪ್ರಭಾವ ಬೀರುವ ಪ್ರಯತ್ನ ಮಾಡದಂತೆ ನ್ಯಾಯಾಲಯ ಎಚ್ಚರಿಕೆ ನೀಡಿದೆ.

ಇದೇ ಪ್ರಕರಣದ ಮತ್ತೋರ್ವ ಆರೋಪಿ ಲೆಫ್ಟಿನೆಂಟ್ ಕರ್ನಲ್ ಪ್ರಸಾದ್ ಪುರೋಹಿತ್ ಅವರ ಜಾಮೀನು ಅರ್ಜಿಯನ್ನು ಇತ್ತೀಚೆಗಷ್ಟೇ ನ್ಯಾಯಾಲಯ ತಿರಸ್ಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com