ಚಂಢಿಗಡ್: ಹರಿಯಾಣದ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರ ಪುತ್ರ ವಿಕಾಸ್ ಬರಾಲಾ ಐಎಎಸ್ ಅಧಿಕಾರಿಯೊಬ್ಬರ ಪುತ್ರಿಯನ್ನು ಅಪಹರಿಸಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಕ್ಕೆ ಸಂಬಂಧಿಸಿದಂತೆ ರಾಜ್ಯಾಧ್ಯಕ್ಷರು ರಾಜಿನಾಮೆ ನೀಡಬೇಕು ಎಂದು ಬಿಜೆಪಿ ಸಂಸದರು ಆಗ್ರಹಿಸಿದ್ದಾರೆ.
ಪಕ್ಷದ ಘನತೆಯನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯಾಧ್ಯಕ್ಷ ಸುಭಾಷ್ ಬರಾಲಾ ಅವರು ತಮ್ಮ ಸ್ಥಾನಕ್ಕೆ ರಾಜಿನಾಮೆ ನೀಡಬೇಕು ಎಂದಿರುವ ಕುರುಕ್ಷೇತ್ರದ ಬಿಜೆಪಿ ಸಂಸದ ರಾಜ್ ಕುಮಾರ್ ಶೈನಿ ಅವರು ಮನೆಯಲ್ಲಿ ಮಕ್ಕಳಿಗೆ ಉತ್ತಮ ಮೌಲ್ಯಗಳನ್ನು ಕಲಿಸದಿದ್ದರೆ ಮಾತ್ರ ಇಂತಹ ಹೀನಾ ಕೆಲಸಗಳನ್ನು ಮಾಡಲು ಅವರು ಆಶ್ರಯಿಸುತ್ತಾರೆ ಎಂದು ಹೇಳಿದ್ದಾರೆ.
ಈ ಪ್ರಕರಣ ಸಂಬಂದ ಬಿಜೆಪಿ ಹಿರಿಯ ಮುಖಂಡ ಸುಬ್ರಮಣಿಯನ್ ಸ್ವಾಮಿ ಅವರು ಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದಾರೆ.
ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ ಸುಭಾಷ್ ಬರಾಲಾ ಅವರು ತಮ್ಮ ರಾಜಕೀಯ ಬಲವನ್ನು ಬಳಸಿ ಬಂಧನವಾದ ಒಂದು ಗಂಟೆಯಲ್ಲಿಯೇ ಜಾಮೀನು ನೀಡಿ ಹೊರಗೆ ಕರೆದುಕೊಂಡು ಬಂದಿದ್ದರು.
ತಮ್ಮ ವಿರುದ್ಧ ಹಲವು ಮಹಿಳಾ ಸಂಘಟನೆಗಳು, ಬಿಜೆಪಿಯ ಸಂಸದರೇ ಧ್ವನಿ ಎತ್ತಿದ್ದರಿಂದ ಅನಿವಾರ್ಯವಾಗಿ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ ನೀಡಲು ಸುಭಾಷ್ ಬರಾಲಾ ಮುಂದಾಗಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.