ನವದೆಹಲಿ: ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಆಸ್ಪತ್ರೆಯಲ್ಲಿ ನಡೆದ ಮಕ್ಕಳ ಸಾವಿನ ದುರಂತಕ್ಕೆ ಸಂಬಂಧಿಸಿದಂತೆ ನೊಬೆಲ್ ಪ್ರಶಸ್ತಿ ವಿಜೇತ ಕೈಲಾಶ್ ಸತ್ಯಾರ್ಥಿ ಅವರು ಅತೀವ ಆಕ್ರೋಶ ವ್ಯಕ್ತಪಡಿಸಿದ್ದು, ಮಕ್ಕಳ ಸಾವು ದುರಂತವಲ್ಲ, ಹತ್ಯಾಕಾಂಡ ಎಂದು ಕಿಡಿಕಾರಿದ್ದಾರೆ.
ಗೋರಕ್ ಪುರ ಬಾಬಾ ರಾಘವ್ ದಾಸ್ ವೈದ್ಯಕೀಯ ಕಾಲೇಜಿನ ಆಸ್ಪತ್ರೆಯಲ್ಲಿ ಆಮ್ಲಜನಕದ ಕೊರತೆಯಿಂದಾಗಿ ಮಕ್ಕಳು ಸಾವನ್ನಪ್ಪಿರುವ ಘಟನೆಯನ್ನು ಕಟು ಶಬ್ದಗಳಿಂದ ಟೀಕಿಸಿರುವ ಸತ್ಯಾರ್ಥಿ, 70 ವರ್ಷಗಳ ಭಾರತ ಸ್ವಾತಂತ್ರ್ಯದ ಆರ್ಥ ಇದೇ ಏನು ಎಂದು ಪ್ರಶ್ನಿಸಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ತಮ್ಮ ಆಕ್ರೋಶ ವ್ಯಕ್ತಪಡಿಸಿರುವ ಕೈಲಾಶ್ ಸತ್ಯಾರ್ಥಿ ಅವರು, ಕೇವಲ ಆಮ್ಲ ಜನಕ ಸಿಗದ ಕಾರಣಕ್ಕೇ 30ಕ್ಕೂ ಹೆಚ್ಚು ಮಕ್ಕಳು ಸಾವನ್ನಪ್ಪಿರುವುದು ದುರಂತವಲ್ಲ. ಬದಲಿಗೆ ಇದೊಂದು ಹತ್ಯಾಕಾಂಡ ಎಂದು ಹೇಳಿದ್ದಾರೆ.
ಅಂತೆಯೇ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯಾನಾಥ್ ಅವರನ್ನು ಉದ್ದೇಶಿಸಿರುವ ಅವರು, ಸಿಎಂ ಯೋಗಿ ಆದಿತ್ಯಾನಾಥ್ ಅವರೇ ನಿಮ್ಮ ಕಠಿಣ ನಿರ್ಧಾರಗಳಿಂದ ಮಾತ್ರ ಇಂತಹ ಸಮಸ್ಯೆಗಳನ್ನು ಬಗೆಹರಿಸಬಹುದಾಗಿದೆ. ವೈದ್ಯಕೀಯ ಕ್ಷೇತ್ರದಲ್ಲಿ ದಶಕಗಳಿಂದಲೂ ಇರುವ ಭ್ರಷ್ಟಾಚಾರ ಕೂಪವನ್ನು ಕೊನೆಗಾಣಿಸಿ ಇಂತಹ ಘಟನೆಗಳು ಮತ್ತೆ ಮರುಕಳಿಸದಂತೆ ಎಚ್ಚರ ವಹಿಸಿ ಎಂದು ಸತ್ಯಾರ್ಥಿ ಮನವಿ ಮಾಡಿಕೊಂಡಿದ್ದಾರೆ.
Advertisement