ನವದೆಹಲಿ: ಭ್ರಷ್ಟಾಚಾರ ಆರೋಪ ಎದುರಿಸುತ್ತಿರುವ ಮಾಜಿ ಕೇಂದ್ರ ಸಚಿವ, ಹಿರಿಯ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರ ಪುತ್ರ ಕಾರ್ತಿ ಚಿದಂಬರಂ ಅವರಿಗೆ ಆಗಸ್ಟ್ 23ರಂದು ಸಿಬಿಐ ಮುಂದೆ ವಿಚಾರಣೆಗೆ ಹಾಜರಾಗುವಂತೆ ಶುಕ್ರವಾರ ಸುಪ್ರೀಂ ಕೋರ್ಟ್ ಸೂಚಿಸಿದೆ.
ಮುಖ್ಯ ನ್ಯಾಯಮೂರ್ತಿ ಜೆ ಎಸ್ ಖೆಹರ್ ಹಾಗೂ ನ್ಯಾಯಮೂರ್ತಿ ಚಂದ್ರಚೂಡ್ ಅವರನ್ನೊಳಗೊಂಡ ಸುಪ್ರೀಂ ಪೀಠ, ಕಾರ್ತಿ ಚಿದಂಬರಂ ಅವರು ವಕೀಲರೊಂದಿಗೆ ಸಿಬಿಐ ಮುಖ್ಯ ಕಚೇರಿಯಲ್ಲಿ ವಿಚಾರಣೆಗೆ ಹಾಜರಾಗಲು ಒಪ್ಪಿಗೆ ನೀಡಿದೆ.
ವಿಚಾರಣೆಗೆ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗಲು ನಮ್ಮ ಕಕ್ಷಿದಾರರು ಸಿದ್ಧರಿರುವುದಾಗಿ ಕಾರ್ತಿ ಪರ ವಕೀಲರು ಕೋರ್ಟ್ ಗೆ ತಿಳಿಸಿದರು. ಹಾಗಾದಾರೆ ಆಗಸ್ಟ್ 23ರಂದು ವಿಚಾರಣೆಗೆ ಹಾಜರಾಗುವಂತೆ ಸುಪ್ರೀಂ ಕೋರ್ಟ್ ಆರೋಪಿಗೆ ಸೂಚಿಸಿದೆ. ಅಲ್ಲದೆ ತಮ್ಮ ವಿರುದ್ಧ ಆರೋಪಗಳಿಗೆ ಸಂಬಂಧಿಸಿದಂತೆ ಅಗತ್ಯ ದಾಖಲೆಗಳನ್ನು ಸಿಬಿಐಗೆ ಸಲ್ಲಿಸುವಂತೆ ಆದೇಶಿಸಿದೆ.
ಆಗಸ್ಟ್ 14ರಂದು ಕಾರ್ತಿ ವಿರುದ್ಧ ಸಿಬಿಐ ನೀಡಿದ್ದ ಲುಕ್ ಔಟ್ ನೋಟಿಸ್ ಗೆ ತಡೆ ನೀಡಿದ್ದ ಮದ್ರಾಸ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿತ್ತು. ಅಲ್ಲದೆ ಆರೋಪಿ ಸಿಬಿಐ ತನಿಖೆಯಲ್ಲಿ ಭಾಗಿಯಾಗಬೇಕು ಎಂದು ಸೂಚಿಸಿತ್ತು.
ಕಾರ್ತಿ ಚಿದಂಬರಂ ಅವರು ಐಎನ್ ಎಕ್ಸ್ ಮೀಡಿಯಾ ಭ್ರಷ್ಟಾಚಾರದಲ್ಲಿ ಭಾಗಿಯಾದ ಹಾಗೂ ವಿದೇಶಿ ವಿನಿಮಯ ನಿಯಮಗಳ ಉಲ್ಲಂಘಿಸಿದ ಆರೋಪ ಎದುರಿಸುತ್ತಿದ್ದಾರೆ.