ನೇಪಾಳದಲ್ಲಿ ಪ್ರವಾಹ: ಭಾರತದಿಂದ ಸಂಪೂರ್ಣ ನೆರವು ಭರವಸೆ ನೀಡಿದ ಪ್ರಧಾನಿ ಮೋದಿ
ಭೀಕರ ಪ್ರವಾಹದಿಂದಾಗಿ ಭಾರೀ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ನೆರೆರಾಷ್ಟ್ರ ನೇಪಾಳಕ್ಕೆ ಭಾರತ ಸಂಪೂರ್ಣ ನೆರವು ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ...
ನವದೆಹಲಿ: ಭೀಕರ ಪ್ರವಾಹದಿಂದಾಗಿ ಭಾರೀ ಸಂಕಷ್ಟದಲ್ಲಿ ಸಿಲುಕಿಕೊಂಡಿರುವ ನೆರೆರಾಷ್ಟ್ರ ನೇಪಾಳಕ್ಕೆ ಭಾರತ ಸಂಪೂರ್ಣ ನೆರವು ನೀಡಲಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶುಕ್ರವಾರ ಹೇಳಿದ್ದಾರೆ.
ನೇಪಾಳ ಪ್ರವಾಹ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟ್ಟರ್ ನಲ್ಲಿ ಪ್ರತಿಕ್ರಿಯೆ ನೀಡಿರುವ ಪ್ರಧಾನಿ ಮೋದಿಯವರು, ನೇಪಾಳ ಪ್ರಧಾನಮಂತ್ರಿ ಶೆರ್ ಬಹದ್ದೂರ್ ಡ್ಯೂಬ ಅವರೊಂದಿಗೆ ಪ್ರವಾಹ ಪರಿಸ್ಥಿತಿ ಕುರಿತಂತೆ ದೂರವಾಣಿ ಕರೆ ಮೂಲಕ ಮಾತುಕತೆ ನಡೆಸಿದ್ದೇನೆ. ಈ ವೇಳೆ ಭಾರತದಿಂದ ಸಂಪೂರ್ಣ ನೆರವು ನೀಡುವುದಾಗಿ ಭರವಸೆ ನೀಡಿದ್ದೇನೆಂದು ಹೇಳಿದ್ದಾರೆ.
ಪ್ರವಾಹ ಪೀಡಿತ ನೇಪಾಳಕ್ಕೆ ಹೆಗಲಿಗೆ ಹೆಗಲು ಕೊಟ್ಟು ಭಾರತ ನಿಲ್ಲಲಿದೆ. ನೆರೆರಾಷ್ಟ್ರಕ್ಕೆ ಅಗತ್ಯವಾದ ಎಲ್ಲಾ ರೀತಿಯ ನೆರವನ್ನು ಭಾರತ ನೀಡಲಿದೆ ಎಂದು ತಿಳಿಸಿದ್ದಾರೆ, ಅಲ್ಲದೆ, ಇದೇ ವೇಳೆ ಪ್ರವಾಹದಲ್ಲಿ ತಮ್ಮ ಕುಟುಂಬ ಸದಸ್ಯರನ್ನು ಕಳೆದುಕೊಂಡವರ ಕುರಿತಂತೆ ಸಂತಾಪವನ್ನು ಸೂಚಿಸಿದ್ದಾರೆ.
ನೇಪಾಳದಲ್ಲಿ ಭೀಕರ ಪ್ರವಾಹ ಸಂಭವಿಸಿದ್ದು, ಪ್ರವಾಹಕ್ಕೆ ಸಿಲುಕಿ ಈವರೆಗೂ 120ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ, 35ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಪ್ರವಾಹದಿಂದಾಗಿ 6 ಲಕ್ಷಕ್ಕೂ ಅಧಿಕ ಮಂದಿ ಸಂಕಷ್ಟಕ್ಕೆ ಸಿಲುಕಿಕೊಂಡಿದ್ದಾರೆ.