ಅಮೆಥಿ: ಪ್ರಮುಖ ಹಿಂದಿ ದಿನಪತ್ರಿಕೆಯೊಂದರ ವರದಿಗಾರನ ಮೇಲೆ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ ಎಂದು ಸೋಮವಾರ ಪೊಲೀಸರು ತಿಳಿಸಿದ್ದಾರೆ.
ನಿನ್ನೆ ರಾತ್ರಿ ಬೈಕ್ ನಲ್ಲಿ ಬಂದ ಮೂವರು ಅಪರಿಚಿತ ವ್ಯಕ್ತಿಗಳು ಅಮರ್ ಉಜ್ವಲ್ ದಿನಪತ್ರಿಕೆಯ ವರದಿಗಾರ ದಿಲೀಪ್ ಕೌಶಾಲ್ ಅವರ ಮೇಲೆ ಗುಂಡು ಹಾರಿಸಿ ಪರಾರಿಯಾಗಿದ್ದಾರೆ ಎಂದು ಜಗದೀಶಪುರ್ ಪೊಲೀಸ್ ಠಾಣಾ ಅಧಿಕಾರಿ ಆರ್ ಎ ಕನೌಜಿಯಾ ಅವರು ಹೇಳಿದ್ದಾರೆ.
ಗುಂಡಿನ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ವರದಿಗಾರರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಸದ್ಯ ಪ್ರಾಣಾಪಯದಿಂದ ಪಾರಾಗಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ವರದಿಗಾರನ ಕುಟುಂಬ ನೀಡಿದ ದೂರಿನ ಆಧಾರದ ಮೇಲೆ ಮೂವರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ ಎಂದಿದ್ದಾರೆ. ಅಲ್ಲದೆ ಗುಂಡಿನ ದಾಳಿಗೆ ಹಳೆ ದ್ವೇಷ ಕಾರಣವಿರುವ ಶಂಕೆ ವ್ಯಕ್ತವಾಗಿದೆ ಎಂದು ಹೇಳಿದ್ದಾರೆ.