ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಚಿವ ಸಂಪುಟ ಪುನರ್ರಚನೆಗೆ ಭಾನುವಾರ ಮುಹೂರ್ತ ನಿಗದಿ ಮಾಡಿದ್ದು, ಅಂದು ಬೆಳಗ್ಗೆ 10 ಗಂಟೆಗೆ ರಾಷ್ಟ್ರಪತಿ ಭವನದಲ್ಲಿ ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ತಿಳಿಸಿದ್ದಾರೆ.
ನರೇಂದ್ರ ಮೋದಿ ಅವರು 2014ರಲ್ಲಿ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಮೂರನೇ ಬಾರಿ ತಮ್ಮ ಸಚಿವ ಸಂಪುಟ ವಿಸ್ತರಣೆ ಮಾಡುತ್ತಿದ್ದು, ರಾಷ್ಟ್ರಪತಿ ಭವನದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಸಿದ್ಧತೆಗಳು ನಡೆದಿವೆ ಎಂದು ಅವರು ಹೇಳಿದ್ದಾರೆ.
ಮೋದಿ ಸಂಪುಟದಲ್ಲಿ ಎನ್ ಡಿಎ ಮಿತ್ರ ಪಕ್ಷಗಳಿಗೆ ಅವಕಾಶ ನೀಡುವ ಉದ್ದೇಶದಿಂದ ಈಗಾಗಲೇ ನಾಲ್ವರು ಸಚಿವರಿಂದ ರಾಜಿನಾಮೆ ಪಡೆದುಕೊಳ್ಳಲಾಗಿದ್ದು, ಇನ್ನು ಇಬ್ಬರ ಸಚಿವರು ರಾಜಿನಾಮೆ ನೀಡುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.
ಹೊಸ ಸಂಪುಟದಲ್ಲಿ ಎನ್ಡಿಎ ಮಿತ್ರಪಕ್ಷಗಳಾದ ಜೆಡಿ(ಯು) ಮತ್ತು ಎಐಎಡಿಎಂಕೆ ಪಕ್ಷಗಳ ಸದಸ್ಯರನ್ನು ಸೇರಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಈ ಸಂಪುಟದಲ್ಲಿ ಹೊಸ ಮುಖಗಳು ಕಾಣಿಸಿಕೊಳ್ಳಬಹುದು ಎನ್ನಲಾಗಿದೆ.
ಎಐಎಡಿಎಂಕೆಯ ತಂಬಿ ದೊರೈ ಮತ್ತು ಕೆ. ವೇಣುಗೋಪಾಲ್ ಸಂಪುಟ ಸೇರುವ ಸಾಧ್ಯತೆ ಇದೆ. ಜೆಡಿಯು ಪಕ್ಷದಿಂದ ಇಬ್ಬರನ್ನು ಸಂಪುಟಕ್ಕೆ ಸೇರಿಸಿಕೊಳ್ಳಬಹುದು ಎನ್ನಲಾಗಿದೆ.
ಮೋದಿ ಸಂಪುಟದಲ್ಲಿ ಸದ್ಯ ಸಚಿವರಾಗಿರುವ ಅರುಣ್ ಜೇಟ್ಲಿ ಮತ್ತು ಹರ್ಷವರ್ಧನ್ ಹೆಚ್ಚುವರಿ ಖಾತೆಗಳನ್ನು ಹೊಂದಿದ್ದಾರೆ. ಸಂಪುಟ ಪುನರ್ರಚನೆಯಿಂದ ಈ ಹೆಚ್ಚುವರಿ ಭಾರ ಕಡಿಮೆಯಾಗಲಿದೆ. ಸದ್ಯ ಅರುಣ್ ಜೇಟ್ಲಿ ಹಣಕಾಸು ಖಾತೆಯ ಜತೆಗೆ ರಕ್ಷಣಾ ಖಾತೆಯನ್ನು ವಹಿಸಿಕೊಂಡಿದ್ದಾರೆ.