ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪದಲ್ಲಿ ಭಾರೀ ಬಿರುಗಾಳಿ, ಮಳೆಯಿಂದಾಗಿ ಅಪಾರ ಪ್ರಮಾಣದ ಆಸ್ತಿಪಾಸ್ತಿ ಹಾನಿಯಾಗಿದೆ. ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಉರುಳಿರುವ ಕಾರಣ, ಕಗ್ಗತ್ತಲು ಆವರಿಸಿದೆ. ಗಾಳಿಯ ತೀವ್ರತೆಗೆ ನೂರಾರು ಮರಗಳು ನೆಲಕ್ಕುರುಳಿದ್ದು, ಮನೆ ಕಟ್ಟಡಗಳು ಹಾನಿಗೀಡಾಗಿವೆ. ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೇರಳದಲ್ಲಿ ಶುಕ್ರವಾರ ಚಂಡಮಾರುತ ಸಂಬಂಧಿ ಘಟನೆಯಿಂದಾಗಿ ಮೂವರು ಮೃತಪಟ್ಟಿದ್ದು, ಮೃತರ ಸಂಖ್ಯೆ 7ಕ್ಕೇರಿದೆ. ಹೀಗಾಗಿ, ಒಟ್ಟಾರೆ ಕೇರಳ ಮತ್ತು ತಮಿಳುನಾಡಿನಲ್ಲಿ ಎರಡು ದಿನಗಳಲ್ಲಿ 12 ಮಂದಿ ಸಾವನ್ನಪ್ಪಿದ್ದಾರೆ.