ಚೆನ್ನೈ: ‘ಒಖಿ’ಚಂಡಮಾರುತ ತಮಿಳುನಾಡು ಹಾಗೂ ಕೇರಳದ ಕರಾವಳಿ ತೀರದಲ್ಲಿ ಭಾರಿ ಹಾನಿಯುಂಟು ಮಾಡಿದ್ದು, ತಮಿಳುನಾಡಿನ ಕನ್ಯಾಕುಮಾರಿ ಸೇರಿದಂತೆ ಕೇಳದ ಕರವಾಳಿಯಲ್ಲಿ ಚಂಡಮಾರುತ್ತಕ್ಕೆ ಬಲಿಯಾದವರ ಸಂಖ್ಯೆ ಭಾನುವಾರ 14ಕ್ಕೆ ಏರಿಕೆಯಾಗಿದೆ. ಇನ್ನು ನೆರೆಯ ರಾಷ್ಟ್ರ ಶ್ರೀಲಂಕಾದಲ್ಲೂ ಚಂಡಮಾರುತದಿಂದಾಗಿ 13 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಇಂದು ಕೇರಳ ಮತ್ತು ಲಕ್ಷದ್ವೀಪ ಕರಾವಳಿಯಲ್ಲಿ ಅಪಾಯದಲ್ಲಿದ್ದ ಸುಮಾರು 539 ಮೀನುಗಾರರನ್ನು ರಕ್ಷಿಸಲಾಗಿದ್ದು, ಕೇರಳದಲ್ಲಿ ಇದುವರೆಗೆ ಒಟ್ಟು 393 ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನೂ ನೂರಾರು ಮೀನುಗಾರರು ಸಮುದ್ರದಲ್ಲಿ ತಪ್ಪಿಸಿಕೊಂಡಿದ್ದು, ಅವರಿಗಾಗಿ ನೌಕಾಪಡೆ ತೀವ್ರ ಶೋಧ ನಡೆಸಿದೆ.
ಚಂಡಮಾರುತ ಹಿನ್ನೆಲೆಯಲ್ಲಿ ಉತ್ತರ ತಮಿಳುನಾಡು ಹಾಗೂ ದಕ್ಷಿಣ ಆಂಧ್ರಪ್ರದೇಶ ಕರಾವಳಿಯಲ್ಲಿ ಡಿಸೆಂಬರ್ 25ರ ವರೆಗೆ ಸಮುದ್ರದ ಆಳಕ್ಕೆ ತೆರಳದಂತೆ ಹವಾಮಾನ ಇಲಾಖೆ ಮೀನುಗಾರರಿಗೆ ಸೂಚನೆ ನೀಡಿದೆ.
ಈ ಮಧ್ಯೆ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಮಧ್ಯಾಹ್ನ 3 ಗಂಟೆಗೆ ತಿರುವನಂತಪುರಂ ಮತ್ತು ಕನ್ಯಾಕುಮಾರಿಗೆ ಭೇಟಿ ನೀಡಿ, ಚಂಡಮಾರುತದಿಂದ ಹಾನಿಗೊಳಗಾದ ಪ್ರದೇಶಗಳನ್ನು ಪರಿಶೀಲಿಸಲಿದ್ದಾರೆ.
ದಕ್ಷಿಣ ಅಂಡಮಾನ್ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ನೆರೆಯ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಪ್ರಾದೇಶಿಕ ಹವಾಮಾನ ಇಲಾಖೆ ತಿಳಿಸಿದೆ.