ಭರುಚ್: ಬುಲೆಟ್ ರೈಲು ಯೋಜನೆ ವಿರೋಧಿಸುವವರು ಎತ್ತಿನ ಗಾಡಿಯಲ್ಲಿ ಪ್ರಯಾಣಿಸಲಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಗುಜರಾತ್ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ಭರುಚ್ ನಲ್ಲಿ ಚುನಾವಣಾ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ, ಕಾಂಗ್ರೆಸ್ ಸರ್ಕಾರ ಸಹ ಬುಲೆಟ್ ರೈಲು ಯೋಜನೆ ತರಲು ಬಯಸಿತ್ತು. ಆದರೆ ಅದನ್ನು ಪಡೆಯುವಲ್ಲಿ ವಿಫಲವಾಗಿದ್ದ ಕಾಂಗ್ರೆಸ್ ವಿರೋಧ ವ್ಯಕ್ತಪಡಿಸುತ್ತಿದೆ ಎಂದು ಹೇಳಿದ್ದಾರೆ.
ಬುಲೆಟ್ ರೈಲು ವಿರೋಧಿಸುವವರು ಎತ್ತಿನ ಗಾಡಿಯಲ್ಲಿ ಪ್ರಯಾಣಿಸಲಿ. ನಾವು ಆ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಜಪಾನ್ ಸಹಯೋಗದಲ್ಲಿ ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಕಾಮಗಾರಿಕೆ ಚಾಲನೆ ನೀಡಲಾಗಿದ್ದು, ಇದರಿಂದ ಸಾವಿರಾರು ಜನಕ್ಕೆ ಉದ್ಯೋಗ ಸಿಗಲಿದೆ ಎಂದರು.
ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಸಹ ಈ ಬುಲೆಟ್ ರೈಲು ಯೋಜನೆ ಜಾರಿಗೆ ತರಲು ಬಯಸಿತ್ತು. ಆದರೆ ಆ ಯೋಜನೆ ಪಡೆದುಕೊಳ್ಳುವಲ್ಲಿ ವಿಫಲವಾಗಿತ್ತು. ಎನ್ ಡಿಎ ಸರ್ಕಾರ ಈಗ ಅದನ್ನು ಸಾಧಿಸಿ ತೋರಿಸಿದೆ ಎಂದರು.
ಪ್ರಧಾನಿ ಮೋದಿ ಅವರ ಬರು ನಿರೀಕ್ಷಿತ ಬುಲೆಟ್ ರೈಲು ಯೋಜನೆಗೆ ಕಳೆದ ಸೆಪ್ಟೆಂಬರ್ ನಲ್ಲಿ ಜಪಾನ್ ಪ್ರಧಾನಿ ಶಿಂಜೊ ಅಬೆಯೊಂದಿಗೆ ಮುಂಬೈ–ಅಹಮದಾಬಾದ್ ಬುಲೆಟ್ ರೈಲು ಯೋಜನೆ ಕಾಮಗಾರಿಗೆ ಚಾಲನೆ ನೀಡಿದ್ದು, ಇದಕ್ಕೆ ಕಾಂಗ್ರೆಸ್ ತೀವ್ರ ವಿರೋಧ ವ್ಯಕ್ತಪಡಿಸಿತ್ತು.