ಅಹಮದಾಬಾದ್: ಗುಜರಾತ್ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಶುಕ್ರವಾರ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದು, ಅಭಿವೃದ್ಧಿ ಹಾಗೂ ಏಕತೆಗೆ ಹೆಚ್ಚು ಒತ್ತು ನೀಡಿದೆ.
ಅಹಮದಾಬಾದ್ ನಲ್ಲಿ ಇಂದು ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಅವರು, 'ಸಂಕಲ್ಪ ಪತ್ರ 2017' ಎಂಬ ಶೀರ್ಷಿಕೆ ಇರುವ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಣಾಳಿಕೆ ಬಿಡುಗಡೆ ಮಾಡಿದ ಬಳಿಕ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಜೇಟ್ಲಿ, ಕಾಂಗ್ರೆಸ್ ಪಾಟಿದಾರ್ ಸಮುದಾಯಕ್ಕೆ ಮೀಸಲಾತಿ ವಿಷಯದಲ್ಲಿ ಸುಳ್ಳು ಭರವಸೆ ನೀಡಿದೆ ಎಂದು ಟೀಕಿಸಿದರು.
ಬಿಜೆಪಿ ಆಡಳಿತವಿರುವ ರಾಜ್ಯವನ್ನು ನಿರಾಧಾರವಾಗಿ ಟೀಕಿಸುತ್ತಿರುವ ಕಾಂಗ್ರೆಸ್ ತೀವ್ರ ತರಾಟೆಗೆ ತೆಗೆದುಕೊಂಡ ಅರುಣ್ ಜೇಟ್ಲಿ, ಗುಜರಾತ್ನ ಆರ್ಥಿಕ ಬೆಳವಣಿಗೆ ದರ ಇಡೀ ದೇಶದಲ್ಲೇ ಗರಿಷ್ಠವಾಗಿದೆ. ಕಳೆದ ಐದು ವರ್ಷಗಳಲ್ಲಿ ರಾಜ್ಯ ಸರಾಸರಿ ಶೇ.10ರಷ್ಟು ಪ್ರಗತಿ ಸಾಧಿಸಿದೆ ಎಂದರು.
ಕಳೆದ ಡಿಸೆಂಬರ್ 4ರಂದು ತನ್ನ ಚುನಾವಣಾ ಪ್ರಣಾಳಿಕೆ ಬಿಡುಗಡೆ ಮಾಡಿದ್ದ ಕಾಂಗ್ರೆಸ್, ರಾಜ್ಯದ ರೈತರ ಸಾಲ ಮನ್ನಾ ಹಾಗೂ ಪಟಿದಾರ್ ಸಮುದಾಯಕ್ಕೆ ಮೀಸಲಾತಿ ನೀಡುವ ಭರವಸೆ ನೀಡಿತ್ತು.