ಚೆನ್ನೈ: ಜಯಲಲಿತಾ ಸೊಸೆ ದೀಪಾ ಪಕ್ಷದ ಕಚೇರಿ ಮೇಲೆ ಕಲ್ಲು ತೂರಾಟ
ತಮಿಳುನಾಡು ರಾಜ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಅವರ ಪಕ್ಷದ ಕಚೇರಿ ಮೇಲೆ ಅನಾಮಧೇಯ ವ್ಯಕ್ತಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಮಂಗಳವಾರ ತಿಳಿದುಬಂದಿದೆ...
ಚೆನ್ನೈ: ತಮಿಳುನಾಡು ರಾಜ್ಯ ಮಾಜಿ ಮುಖ್ಯಮಂತ್ರಿ ದಿವಂಗತ ಜೆ. ಜಯಲಲಿತಾ ಅವರ ಸೋದರ ಸೊಸೆ ದೀಪಾ ಜಯಕುಮಾರ್ ಅವರ ಪಕ್ಷದ ಕಚೇರಿ ಮೇಲೆ ಅನಾಮಧೇಯ ವ್ಯಕ್ತಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿದೆ ಎಂದು ಮಂಗಳವಾರ ತಿಳಿದುಬಂದಿದೆ.
ಪಕ್ಷದ ಕಚೇರಿ ಮೇಲೆ ಕಲ್ಲು ತೂರಾಟ ನಡೆದಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ದೀಪಾ ಅವರು, ಇಂದು ಮಧ್ಯಾಹ್ನ 12.30ರ ಸುಮಾರಿಗೆ ಅನಾಮಧೇಯ ಗುಂಪೊಂದು ಇದ್ದಕ್ಕಿದ್ದಂತೆ ಟಿ.ನಗರದಲ್ಲಿರುವ ಪಕ್ಷದ ಕಚೇರಿ ಮುಂದೆ ಬಂದು ಕಲ್ಲು ತೂರಾಟ ನಡೆಸಿದರು ಎಂದು ಹೇಳಿದ್ದಾರೆ.
ಘಟನೆಯಲ್ಲಿ ಕಚೇರಿಯ ಕಿಟಕಿಯ ಗಾಜುಗಳು ಹಾನಿಗೊಳಗಾಗಿದ್ದು, ಘಟನಾ ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆಂದು ತಿಳಿದುಬಂದಿದೆ.
ಘಟನೆ ಹಿಂದೆ ಪರಿಚಯಸ್ಥರ ಕೈವಾಡವಿದೆ. ಘಟನೆ ಸಂಬಂಧ ಮಂಬಲಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸು ತನಿಖೆ ಆರಂಭಿಸಿದ್ದಾರೆಂದು ದೀಪಾ ಅವರು ತಿಳಿಸಿದ್ದಾರೆ.