ತೇಜ್ ಬಹದ್ದೂರ್ ಯಾದವ್
ದೇಶ
ಭ್ರಷ್ಟಾಚಾರ ನಿರ್ಮೂಲನೆ: ಪ್ರಧಾನಿಯ ಬದ್ಧತೆಯನ್ನು ಪ್ರಶ್ನಿಸಿದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್!
ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿರುವುದನ್ನು ಪ್ರಕಟಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಈಗ ಪ್ರಧಾನಿ ಅವರ ಭ್ರಷ್ಟಾಚಾರ ತೊಲಗಿಸುವ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ನವದೆಹಲಿ: ಸೈನಿಕರಿಗೆ ಕಳಪೆ ಮಟ್ಟದ ಆಹಾರ ನೀಡಲಾಗುತ್ತಿದೆ ಎಂಬ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಕಟಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಈಗ ಪ್ರಧಾನಿ ನರೇಂದ್ರ ಮೋದಿ ಅವರ ಭ್ರಷ್ಟಾಚಾರ ತೊಲಗಿಸುವ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ಕಳಪೆ ಆಹಾರ ನೀಡಲಾಗುತ್ತಿರುವವರ ವಿರುದ್ಧ ಕ್ರಮ ಕೈಗೊಳ್ಳುವ ಬದಲು ಅದನ್ನು ಸಾರ್ವಜನಿಕರ ಗಮನಕ್ಕೆ ತಂದ ತಮಗೆ ಹಿಂಸೆ ನೀಡಲಾಗುತ್ತಿದೆ ಎಂದು ತೇಜ್ ಬಹದ್ದೂರ್ ಯಾದವ್ ಇತ್ತೀಚಿನ ಫೇಸ್ ಬುಕ್ ವಿಡಿಯೋದಲ್ಲಿ ಹೇಳಿದ್ದಾರೆ. " ಕಳಪೆ ಆಹಾರ ಪೂರೈಕೆ ಬಗ್ಗೆ ನೀಡಿದ್ದ ದೂರಿನ ಬಗ್ಗೆ ಈ ವರೆಗೂ ಕ್ರಮ ಕೈಗೊಳ್ಳಲಾಗಿಲ್ಲ. ವಿಡಿಯೋ ಪ್ರಕಟಿಸಿದ್ದಕ್ಕಾಗಿ ಕಿರುಕುಳ ನೀಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಭ್ರಷ್ಟಾಚಾರ ತೊಲಗಿಸುವ ಮಾತನ್ನಾಡುತ್ತಾರೆ. ಆದರೆ ನಮ್ಮ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಾಚಾರವನ್ನು ಬಹಿರಂಗಗೊಳಿಸಿದ್ದಕ್ಕಾಗಿ ನನಗೆ ಕಿರುಕುಳ ನೀಡಲಾಗುತ್ತಿದೆ. ಇಲ್ಲಿ ಏನಾಗುತ್ತಿದೆ? ಎಂದು ಪ್ರಧಾನಿ ನರೇಂದ್ರ ಮೋದಿ ಅವರ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.
ಇನ್ನು ಫೇಸ್ ಬುಕ್ ನಲ್ಲಿ ಪಾಕಿಸ್ತಾನ ಸ್ನೇಹಿತರನ್ನು ಹೊಂದಿರುವ ಬಗೆಗಿನ ವರದಿಗಳ ಬಗ್ಗೆಯೂ ಪ್ರತಿಕ್ರಿಯೆ ನೀಡಿರುವ ತೇಜ್ ಬಹದ್ದೂರ್ ಯಾದವ್, ಜ.10 ರಂದು ನನ್ನ ಮೊಬೈಲ್ ನ್ನು ವಶಕ್ಕೆ ಪಡೆಯಲಾಗಿತ್ತು. ನನ್ನ ಅನುಮತಿ ಇಲ್ಲದೆಯೇ ಮೊಬೈಲ್ ನಲ್ಲಿ ಸಾಮಾಜಿಕ ಜಾಲತಾಣವನ್ನು ಬಳಕೆ ಮಾಡಲಾಗಿದೆ. ನನ್ನ ಮೊಬೈಲ್ ನಲ್ಲಿ ಹಸ್ತಕ್ಷೇಪ ಮಾಡಲಾಗಿದ್ದು, ಪಾಕಿಸ್ತಾನಿ ಸ್ನೇಹಿತರಿದ್ದಾರೆ ಎಂದು ಆರೋಪಿಸಲಾಗುತ್ತಿದೆ ಎಂದಿದ್ದಾರೆ ತೇಜ್ ಬಹದ್ದೂರ್ ಯಾದವ್.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ