ಪಣಜಿ: ಜಮ್ಮು ಮತ್ತು ಕಾಶ್ಮೀರದ ಸೇನಾ ನೆಲೆ ಮೇಲೆ ಉಗ್ರರು ದಾಳಿ ನಡೆಸುತ್ತಿದ್ದರೆ ರಕ್ಷಣಾ ಸಚಿವ ಮನೋಹರ್ ಪರಿಕ್ಕರ್ ಅವರು ಗೋವಾ ಚುನಾವಣಾ ಪ್ರಚಾರದಲ್ಲಿ ಕಾರ್ಯನಿರತರವಾಗಿದ್ದಾರೆಂದು ಶಿವಸೇನೆ ಸೋಮವಾರ ವ್ಯಂಗ್ಯವಾಡಿದೆ.
ಅಖ್ನೂರ್ ಸೆಕ್ಟರ್ ಮೇಲೆ ನಡೆದ ಉಗ್ರ ದಾಳಿ ಪ್ರಕರಣ ಸಂಬಂಧ ಪ್ರತಿಕ್ರಿಯೆ ನೀಡಿರುವ ಶಿವಸೇನೆ ನಾಯಕ ಸಂಜಯ್ ರಾವತ್ ಅವರು, ಒಂದೆಡೆ ಸೇನಾ ನೆಲೆ ಮೇಲೆ ಉಗ್ರರು ದಾಳಿನಡೆಸುತ್ತಿದ್ದರೆ, ಮತ್ತೊಂದೆಡೆ ಗೋವಾ ಕಚೇರಿಯಲ್ಲಿ ಕುಳಿತುಕೊಂಡಿರುವ ಮನೋಹರ್ ಪರಿಕ್ಕರ್ ಚುನಾವಣೆ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಗೋವಾದಲ್ಲಿ ಅವರು ತಮ್ಮ ಭವಿಷ್ಯವನ್ನು ರೂಪಿಸಿಕೊಂಡಿರಬಹುದು, ಆದರೆ, ಪರಿಕ್ಕರ್ ಅವರು ಕೇಂದ್ರ ಸಚಿವರಾಗಿದ್ದಾರೆಂದು ಹೇಳಿದ್ದಾರೆ.
ಸೇನಾ ನೆಲೆ ಮೇಲೆ ಉಗ್ರರು ದಾಳಿ ನಡೆಸುತ್ತಿರುವ ಸಮಯದಲ್ಲಿ ಪರಿಕ್ಕರ್ ಅವರು ಗೋವಾ ಚುನಾವಣೆಯಲ್ಲಿ ಕಾರ್ಯನಿರತರಾಗಿರುವುದು ನಿಜಕ್ಕೂ ದುರಾದೃಷ್ಟಕರ ಸಂಗತಿ. ಕೂಡಲೇ ಈ ವಿಚಾರದಲ್ಲಿ ಪ್ರಧಾನಮಂತ್ರಿ ನರೇಂದ್ರಮೋದಿಯವರು ಮಧ್ಯಪ್ರವೇಶ ಮಾಡಬೇಕಿದೆ ಎಂದು ತಿಳಿಸಿದ್ದಾರೆ.
ನಿನ್ನೆಯಷ್ಟೇ ಜಮ್ಮು ಜಿಲ್ಲೆಯ ಅಖ್ನೂರ್ ಪ್ರದೇಶದಲ್ಲಿರುವ ಜನರಲ್ ರಿಸರ್ವ್ ಇಂಜಿನಿಯರ್ ಫೋರ್ಸ್ (ಜಿಆರ್ ಇಎಫ್) ನೆಲೆ ಮೇಲೆ ಉಗ್ರರು ದಾಳಿ ನಡೆಸಿದ್ದರು. ದಾಳಿ ವೇಳೆ ಜಿಆರ್ ಇಎಫ್ ನಲ್ಲಿ ಕೆಲಸ ಮಾಡುತ್ತಿದ್ದ ಮೂವರು ಕಾರ್ಮಿಕರನ್ನು ಉಗ್ರರು ಹತ್ಯೆ ಮಾಡಿ ಸ್ಥಳದಿಂದ ಪರಾರಿಯಾಗಿದ್ದರು.
Advertisement