ಲಖನೌ: ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಗೆ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಶನಿವಾರ ತಮ್ಮ ಪಕ್ಷದ ಚುನಾವಣಾ ಪ್ರಣಾಳಿಕೆ 'ಲೋಕ ಕಲ್ಯಾಣ ಸಂಕಲ್ಪ ಪಾತ್ರ' ಬಿಡುಗಡೆ ಮಾಡಿದ್ದು, ಬಿಜೆಪಿ ಅಧಿಕಾರಕ್ಕೆ ಸಂವಿಧಾನಿಕ ಚೌಕಟ್ಟಿನಲ್ಲಿ ರಾಮಮಂದಿರ ನಿರ್ಮಾಣ ಸೇರಿದಂತೆ ಹಲವು ಭರವಸೆಗಳನ್ನು ನೀಡಲಾಗಿದೆ.
ಇಂದು ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಅಮಿತ್ ಶಾ, ಪಕ್ಷ ಅಧಿಕಾರಕ್ಕೆ ಬಂದರೆ, ಲಖನೌ-ನೊಯ್ಡಾ ನಡುವೆ ಮೆಟ್ರೊ ರೈಲು, ರಾಜ್ಯದ ಎಲ್ಲಾ ವಿಶ್ವವಿದ್ಯಾಲಯಗಳಲ್ಲಿ ಉಚಿತ ವೈಫೈ ಸೌಲಭ್ಯ ಹಾಗೂ ಯುವಕರಿಗೆ ಉಚಿತ ಲ್ಯಾಪ್ಟಾಪ್ ವಿತರಿಸುವ ಜತೆಗೆ 1 ಜಿಬಿ ಉಚಿತ ಇಂಟರ್ನೆಟ್ ಸೌಲಭ್ಯ ಒದಗಿಸಲಾಗುವುದು ಎಂದರು.
ನಾವು ಅಧಿಕಾರಕ್ಕೆ ಬಂದರೆ ಕೃಷಿ ಕ್ಷೇತ್ರದ ಅಭಿವೃದ್ಧಿಗಾಗಿ 150 ಕೋಟಿ ರುಪಾಯಿ ಮೀಸಲಿಡುತ್ತೇವೆ. ದೀನ್ ದಯಾಳ್ ಸುರಕ್ಷತಾ ಬಿಮಾ ಯೋಜನೆಯಡಿ ಭೂರಹಿತರಿಗೆ ತಲಾ 2 ಲಕ್ಷ ರುಪಾಯಿ ವಿಮೆ ಮಾಡಿಸಲಾಗುವುದು ಎಂದು ಅಮಿತ್ ಶಾ ಭರವಸೆ ನೀಡಿದ್ದಾರೆ.
ರಾಜ್ಯದಲ್ಲಿ 108 ಆಂಬುಲೆನ್ಸ್ ಸೇವೆ ಜಾರಿಗೆ ತರಲಾಗುವುದು. ಹೊಸದಾಗಿ 25 ವೈದ್ಯಕೀಯ ಕಾಲೇಜು ಮತ್ತು 6 ಕಡೆ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗಳನ್ನು (ಏಮ್ಸ್) ಸ್ಥಾಪಿಸಲಾಗುವುದು ಎಂದು ಶಾ ತಿಳಿಸಿದ್ದಾರೆ.