ದೇಶ
ಮೇಕೆದಾಟು ಡ್ಯಾಂ ನಿರ್ಮಾಣಕ್ಕೆ ಅನುಮತಿ ಕೊಡಬೇಡಿ: ಕೇಂದ್ರಕ್ಕೆ ತಮಿಳುನಾಡು ಸಿಎಂ ಪತ್ರ
ಕರ್ನಾಟಕದ ಉದ್ದೇಶಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ....
ಚೆನ್ನೈ: ಕರ್ನಾಟಕದ ಉದ್ದೇಶಿತ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಅನುಮತಿ ನೀಡಬೇಡಿ ಎಂದು ತಮಿಳುನಾಡು ಮುಖ್ಯಮಂತ್ರಿ ಇ.ಕೆ.ಪಳನಿಸ್ವಾಮಿ ಅವರು ಬುಧವಾರ ಕೇಂದ್ರ ಸರ್ಕಾರ ಒತ್ತಾಯಿಸಿದ್ದಾರೆ.
ಈ ಮಧ್ಯೆ ಮೇಕೆದಾಟು ಡ್ಯಾಂ ನಿರ್ಮಾಣ ವಿರೋಧಿಸಿ ಕೇಂದ್ರಕ್ಕೆ ಸರ್ವಪಕ್ಷಗಳ ನಿಯೋಗ ಕರೆದೊಯ್ಯುವಂತೆ ಪ್ರತಿಪಕ್ಷ ಡಿಎಂಕೆ ತಮಿಳುನಾಡು ಮುಖ್ಯಮಂತ್ರಿಯನ್ನು ಆಗ್ರಹಿಸಿದೆ. ಅಲ್ಲದೆ ಈ ಸಂಬಂಧ ನಿರ್ಣಯ ಕೈಗೊಳ್ಳುವಂತೆಯೂ ಒತ್ತಾಯಿಸಿದೆ.
ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಾಂತ್ರಿಕ ಅನುಮತಿ ಕೋರಿ ಕರ್ನಾಟಕ ಸರ್ಕಾರ ಕೇಂದ್ರ ಜಲ ಆಯೋಗಕ್ಕೆ ಮನವಿ ಮಾಡಿ, ಯೋಜನೆಯ ವಿಸ್ತೃತ ವರದಿ ಸಲ್ಲಿಸಿದೆ ಎಂಬ ಮಾಧ್ಯಮಗಳ ವರದಿಯ ಹಿನ್ನೆಲೆಯಲ್ಲಿ ಪಳನಿಸ್ವಾಮಿ ಅವರು ಇಂದು ಕೇಂದ್ರ ಜಲ ಸಂಪನ್ಮೂಲ ಸಚಿವೆ ಉಮಾ ಭಾರತಿಯವರಿಗೆ ಪತ್ರ ಬರೆದಿದ್ದು, ಸದ್ಯದ ಪರಿಸ್ಥಿತಿಯಲ್ಲಿ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ತಾಂತ್ರಿಕ ಒಪ್ಪಿಗೆ ನೀಡದಂತೆ ಜಲ ಆಯೋಗದ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸುವಂತೆ ಮನವಿ ಮಾಡಿದ್ದಾರೆ.
ಇತ್ತೀಚಿಗಷ್ಟೆ ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೇಕೆದಾಟುವಿನಲ್ಲಿ ನಾವು ನಿರ್ಮಾಣ ಮಾಡುತ್ತಿರುವ ಸಮತೋಲನ ಜಲಾಶಯದಿಂದ ತಮಿಳುನಾಡಿಗೆ ಯಾವುದೇ ಪರಿಣಾಮ ಬೀರಲ್ಲ ಮತ್ತು ಕಾವೇರಿ ನ್ಯಾಯಾಧೀಕರಣದ ಆದೇಶವನ್ನು ಉಲ್ಲಂಘಿಸಿಲ್ಲ ಎಂದು ಸ್ಪಷ್ಟಪಡಿಸಿದ್ದರು.