ನವದೆಹಲಿ: ಪಾಕಿಸ್ತಾನ ಸೇನೆ ಸೋಮವಾರ ಒಂದೇ ದಿನದಲ್ಲಿ ಎರಡನೇ ಬಾರಿ ಕದನ ವಿರಾಮ ಉಲ್ಲಂಘಿಸಿದ್ದು, ಜಮ್ಮು ಮತ್ತು ಕಾಶ್ಮೀರದ ಉರಿ ಸೆಕ್ಟರ್ ನಲ್ಲಿ ಭಾರತೀಯ ಸೇನೆಯ ಹಲವು ಪೋಸ್ಟ್ ಗಳನ್ನು ಗುರಿಯಾಗಿಸಿಕೊಂಡು ಅಪ್ರಚೋದಿತ ಗುಂಡಿನ ದಾಳಿ ನಡೆಸಿದೆ.
ಪಾಕ್ ಸೇನೆ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಭಾರತೀಯ ಯೋಧ ಗಂಭೀರವಾಗಿ ಗಾಯಗೊಂಡಿದ್ದು, ಭಾರತೀಯ ಸೇನೆ ಪಾಕ್ ಗೆ ತಕ್ಕ ಪ್ರತ್ಯುತ್ತರ ನೀಡುತ್ತಿದೆ.
ಇಂದು ಬೆಳಗ್ಗೆಯಷ್ಟೇ ಪೂಂಚ್ ಮತ್ತು ರಾಜೋಚಿ ಜಿಲ್ಲೆಯಲ್ಲಿ ಪಾಕ್ ನಡೆಸಿದ ಅಪ್ರಚೋದಿತ ಗುಂಡಿನ ದಾಳಿಯಲ್ಲಿ ಓರ್ವ ಯೋಧ ಹುತಾತ್ಮರಾಗಿದ್ದರಲ್ಲದೆ ಒಂಬತ್ತು ವರ್ಷದ ಬಾಲಕಿ ಸಹ ಮೃತಪಟ್ಟಿದ್ದಾಳೆ.
ಭಾರತ ಮತ್ತು ಪಾಕಿಸ್ತಾನ ಗಡಿಗಳಲ್ಲಿ ಪದೇ ಪದೇ ನಡೆಯುತ್ತಿರುವ ಕದನ ವಿರಾಮ ಉಲ್ಲಂಘನೆ, ಅಪ್ರಚೋದಿತ ಗುಂಡಿನ ದಾಳಿ ಹಿನ್ನಲೆಯಲ್ಲಿ ಇಂದು ಉಭಯ ದೇಶದ ಸೇನಾ ಮುಖ್ಯಸ್ಥರು ಡಿಜಿಎಂಒ ಸಭೆ ನಡೆಸಿ, ಮಾತುಕತೆ ನಡೆಸಿದ್ದಾರೆ.