ನವದೆಹಲಿ: ಚುನಾವಣಾ ಆಯೋಗಕ್ಕೆ ಲಂಚ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಎಐಎಡಿಎಂಕೆ ನಾಯಕ ಟಿಟಿವಿ ದಿನಕರನ್ ಮಧ್ಯವರ್ತಿ ಸುಕೇಶ್ ಚಂದ್ರಶೇಖರ್ ಜಾಮೀನು ನೀಡಲು ವಿಶೇಷ ಕೋರ್ಟ್ ಶನಿವಾರ ನಿರಾಕರಿಸಿದೆ.
ಕಳೆದ ಏಪ್ರಿಲ್ 16ರಂದು ಬಂಧನಕ್ಕೊಳಗಾಗಿದ್ದ ಸುಕೇಶ್ ಚಂದ್ರಶೇಖರ್ ವಿರುದ್ಧು ದೆಹಲಿ ಪೊಲೀಸರು ಜುಲೈ 14ರಂದು ಚಾರ್ಜ್ ಶೀಟ್ ಸಲ್ಲಿಸಿದ್ದು, ಈ ಹಿನ್ನೆಲೆಯಲ್ಲಿ ಆರೋಪಿ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ನ್ಯಾಯಾಧೀಶೆ ಪೂನಂ ಚೌಧರಿ ಅವರು ಇಂದು ವಜಾಗೊಳಿಸಿದ್ದಾರೆ.
ತಮ್ಮ ವಿರುದ್ಧದ ತನಿಖೆ ಮುಕ್ತಾಯಗೊಂಡಿದೆ ಮತ್ತು ಪೊಲೀಸರು ಈಗಾಗಲೇ ಚಾರ್ಜ್ ಶೀಟ್ ಸಲ್ಲಿಸರುವುದರಿಂದ ಜಾಮೀನು ನೀಡುವಂತೆ ಕೋರ್ಟ್ ಸುಕೇಶ್ ಚಂದ್ರಶೇಖರ್ ಅವರು ಮನವಿ ಮಾಡಿದ್ದರು. ಆದರೆ ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸರ್ಕಾರಿ ಅಭಿಯೋಜಕರು, ತನಿಖೆ ಇನ್ನು ಪೂರ್ಣಗೊಂಡಿಲ್ಲ ಎಂದರು.
ಎರಡೆಲೆ ಚಿಹ್ನೆ ಪಡೆಯಲು ಚುನಾವಣಾ ಆಯೋಗದ ಅಧಿಕಾರಿಗಳಿಗೆ ಲಂಚ ನೀಡಲು ಯತ್ನಿಸಿದ ಆರೋಪದ ಮೇಲೆ ಸುಕೇಶ್ ಅವರನ್ನು ಬಂಧಿಸಲಾಗಿದೆ.
ಈ ಹಿಂದೆ ದೆಹಲಿ ಪೊಲೀಸರು ದಿನಕರನ್, ಸುಖೇಶ್ ಚಂದ್ರ ಶೇಖರ್ ನನ್ನು ಒಟ್ಟಿಗೆ ವಿಚಾರಣೆಗೆ ಒಳಪಡಿಸಿ ಲಂಚ ನೀಡಲು ಪ್ರಯತ್ನಿಸಿದ ಆರೋಪದ ಕುರಿತು ಹೆಚ್ಚಿನ ಮಾಹಿತಿ ಕಲೆ ಹಾಕಿದ್ದರು.