ಮೀರತ್: ಉತ್ತರ ಪ್ರದೇಶದ ಕಾಂಗ್ರೆಸ್ ಸದಸ್ಯರೊಬ್ಬರು ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆದಿದ್ದು ಪಕ್ಷದ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
ಮಧ್ಯಪ್ರದೇಶದ ಮಂಡಸೌರ್ ನಲ್ಲಿ ರೈತರ ಗಲಭೆ ನಡೆದ ನಂತರ ಅಲ್ಲಿಗೆ ಭೇಟಿ ನೀಡಿದ್ದ ರಾಹುಲ್ ಗಾಂಧಿ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಲು ಇಂಡಿಯನ್ ನ್ಯಾಷನಲ್ ಕಾಂಗ್ರೆಸ್ ಎಂಬ ವಾಟ್ಸ್ ಆಪ್ ಗ್ರೂಪ್ ನಲ್ಲಿ ಮೆಸೇಜ್ ಕಳಿಸಿರುವ ಪಕ್ಷದ ಸದಸ್ಯ ರಾಹುಲ್ ಗಾಂಧಿ ಅವರನ್ನು ಪಪ್ಪು ಎಂದು ಕರೆದಿದ್ದಾರೆ.
ಪಪ್ಪು ಅದಾನಿ, ಅಂಬಾನಿ, ಮಲ್ಯ ಅವರೊಂದಿಗೆ ಕೈ ಜೋಡಿಸಬಹುದಿತ್ತು. ಪಪ್ಪು ಸಚಿವ, ಪ್ರಧಾನ ಮಂತ್ರಿಯಾಗಬಹುದಿತ್ತು. ಆದರೆ ಅದ್ಯಾವುದನ್ನೂ ಮಾಡಲಿಲ್ಲ. ಆದರೆ ಮಂಡಸೌರ್ ಗೆ ತೆರಳಿ ಜೀವನ ಕಂಡುಕೊಂಡಿದ್ದಾರೆ ಎಂದು ಕಾಂಗ್ರೆಸ್ ಸದಸ್ಯ ಪ್ರಧಾನ್ ವಾಟ್ಸ್ ಆಪ್ ಗೆ ಮೆಸೇಜ್ ಕಳಿಸಿದ್ದಾರೆ.
ಈ ಬಗ್ಗೆ ಕಾಂಗ್ರೆಸ್ ನ ಶಿಸ್ತು ಸಮಿತಿ ಅಧ್ಯಕ್ಷ ರಾಮಕೃಷ್ಣ ದ್ವಿವೇದಿ ಪ್ರತಿಕ್ರಿಯೆ ನೀಡಿದ್ದು, ಪ್ರಧಾನ್ ಅವರನ್ನು ಪಕ್ಷದ ಎಲ್ಲಾ ಹುದ್ದೆಯಿಂದ ವಜಾಗೊಳಿಸುತ್ತಿರುವುದಾಗಿ ಹೇಳಿದ್ದಾರೆ.