ನವದೆಹಲಿ: ಸೌಲಭ್ಯದಿಂದ ವಂಚಿತರಾದ ನಿರ್ಗತಿಕರಿಗೆ ಮತ್ತು ಸಮಾಜದ ಎಲ್ಲಾ ಬಡ ವರ್ಗದವರಿಗೆ ಆರೋಗ್ಯಸೇವೆ ತಲುಪಲು ರಾಷ್ಟ್ರೀಯ ಆರೋಗ್ಯ ಯೋಜನೆ ಉದ್ದೇಶವನ್ನಿಟ್ಟುಕೊಂಡಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಜೆ.ಪಿ.ನಡ್ಡಾ ತಿಳಿಸಿದ್ದಾರೆ.
ಇಂದು ಲೋಕಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಯೋಜನೆಯನ್ನು ಮಂಡಿಸಿ ಮಾತನಾಡಿದ ಅವರು, ಕಾಲದ ಮಿತಿಯಲ್ಲಿ ಒಟ್ಟು ದೇಶೀಯ ಉತ್ಪನ್ನ (ಜಿಡಿಪಿ)ದಲ್ಲಿ ಸಾರ್ವಜನಿಕ ಆರೋಗ್ಯ ವೆಚ್ಚವನ್ನು ಶೇಕಡಾ 2.5ರಷ್ಟು ಹೆಚ್ಚಿಸುವ ಪ್ರಸ್ತಾವನೆಯನ್ನು ಯೋಜನೆ ಒಳಗೊಂಡಿದೆ ಎಂದು ತಿಳಿಸಿದರು.
ರೋಗಿಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆ ರೂಪಿಸಲಾಗಿದೆ. ರೋಗಿಗಳಿಗೆ ಚಿಕಿತ್ಸೆ ನೀಡುವ ಮೂಲಕ ಸಶಕ್ತೀಕರಣಕ್ಕೆ ಒತ್ತು ನೀಡಲಾಗುವುದು. ಆರೋಗ್ಯ ಸೇವೆಯಲ್ಲಿ ಗುಣಮಟ್ಟ ಕಾಪಾಡಲಾಗುವುದು. ಈ ಯೋಜನೆಯಡಿ ಬಡವರಿಗೆ ಸರಿಯಾದ ಚಿಕಿತ್ಸೆ ಸಿಗದಿದ್ದರೆ ಪ್ರಕರಣದ ವಿಚಾರಣೆ ನಡೆಸಲು ನ್ಯಾಯಾಧೀಕರಣ ಸ್ಥಾಪಿಸಲಾಗುವುದು ಎಂದು ಹೇಳಿದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ರಾಷ್ಟ್ರೀಯ ಆರೋಗ್ಯ ಯೋಜನೆಗೆ ಅನುಮೋದನೆ ನೀಡಲಾಗಿತ್ತು.