ಲಖನೌ: ಉತ್ತರಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಇವಿಎಂ(ವಿದ್ಯುನ್ಮಾನ ಮತ ಯಂತ್ರ)ನಲ್ಲಿ ಗೋಲ್ ಮಾನ್ ನಡೆಸಿದೆ ಎಂದು ಆರೋಪಿಸಿರುವ ಬಹುಜನ ಸಮಾಜವಾದಿ ಪಕ್ಷ(ಬಿಎಸ್ಪಿ) ಮುಖ್ಯಸ್ಥೆ ಮಾಯಾವತಿ ಇನ್ನು ಎರಡು ಮೂರು ದಿನಗಳಲ್ಲಿ ಕೋರ್ಟ್ ಮೆಟ್ಟಿಲೇರುವುದಾಗಿ ತಿಳಿಸಿದ್ದಾರೆ.
ಇವಿಎಂ ಯಂತ್ರಗಳನ್ನು ತಿರುಚುವ ಮೂಲಕ ಉತ್ತರಪ್ರದೇಶ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಗಳಿಸಿದೆ. ಹೀಗಾಗಿ ಬಿಜೆಪಿ ವಿರುದ್ಧ ಕೋರ್ಟ್ ಮೆಟ್ಟಿಲೇರುವುದಾಗಿ ಲೋಕಸಭಾ ಆವರಣದಲ್ಲಿ ಮಾಯಾವತಿ ಹೇಳಿದ್ದಾರೆ.
ಎಲೆಕ್ಟ್ರಾನಿಕ್ ವೋಟಿಂಗ್ ಮೆಷೀನ್ ಗಳ ಕುರಿತು ಮಾಯಾವತಿ ಮಾಡಿದ್ದ ಆರೋಪವನ್ನು ಕೇಂದ್ರ ಚುನಾವಣಾ ಆಯೋಗ ತಿರಸ್ಕರಿಸಿತ್ತು. ದಕ್ಷ ತಾಂತ್ರಿಕ ಮತ್ತು ಆಡಳಿತಾತ್ಮಕ ರಕ್ಷಣೆ ಇರುವುದರಿಂದ ಇವಿಎಂಗಳನ್ನು ಟ್ಯಾಂಪರ್ ಮಾಡಲು ಸಾಧ್ಯವಿಲ್ಲ ಎಂದು ಆಯೋಗ ಸ್ಪಷ್ಟಪಡಿಸಿತ್ತು.
ಇತ್ತೀಚೆಗಷ್ಟೇ ನಡೆದ ಉತ್ತರಪ್ರದೇಶ ಚುನಾವಣೆಯಲ್ಲಿ 403 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 325 ಕ್ಷೇತ್ರಗಳಲ್ಲಿ ಜಯಭೇರಿ ಸಾಧಿಸಿತ್ತು. ಇನ್ನು 80 ಶಾಸಕರನ್ನು ಹೊಂದಿದ್ದ ಬಿಎಸ್ಪಿ ಈ ಬಾರಿಯ ಚುನಾವಣೆಯಲ್ಲಿ ಕೇವಲ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲು ಮಾತ್ರ ಸಾಧ್ಯವಾಗಿತ್ತು.