ಅಕ್ರಮ ಕಸಾಯಿಖಾನೆಗಳ ವಿರುದ್ಧವಷ್ಟೇ ನಮ್ಮ ಕ್ರಮ: ಯೋಗಿ ಆದಿತ್ಯನಾಥ್ ಭರವಸೆ

ಕಾನೂನು ಹಾಗೂ ನಿಯಮಗಳನ್ನು ಪಾಲಿಸುತ್ತಿರುವ ಕಸಾಯಿಖಾನೆಗಳು ಎಂದಿನಂತೆ ತನ್ನ ಕಾರ್ಯನಿರ್ವಹಿಸಲಿದ್ದು, ಅಕ್ರಮ ಕಸಾಯಿಖಾನೆಗಳ ವಿರುದ್ಧವಷ್ಟೇ ನಮ್ಮ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್...
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
ಲಖನೌ: ಕಾನೂನು ಹಾಗೂ ನಿಯಮಗಳನ್ನು ಪಾಲಿಸುತ್ತಿರುವ ಕಸಾಯಿಖಾನೆಗಳು ಎಂದಿನಂತೆ ತನ್ನ ಕಾರ್ಯನಿರ್ವಹಿಸಲಿದ್ದು, ಅಕ್ರಮ ಕಸಾಯಿಖಾನೆಗಳ ವಿರುದ್ಧವಷ್ಟೇ ನಮ್ಮ ಸರ್ಕಾರ ಕ್ರಮಕೈಗೊಳ್ಳಲಿದೆ ಎಂದು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಭರವಸೆ ನೀಡಿದ್ದಾರೆ. 
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ಉತ್ತರಪ್ರದೇಶ ರಾಜ್ಯ ಆರೋಗ್ಯ ಸಚಿವ ಸಿದ್ಧಾರ್ಥ್ ನಾಥ್ ಸಿಂಗ್ ಅವರು, ಅಕ್ರಮ ಕಸಾಯಿಖಾನೆಗಳ ವಿರುದ್ಧವಷ್ಟೇ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿಗಳು ಭರವಸೆಯನ್ನು ನೀಡಿದ್ದಾರೆಂದು ಹೇಳಿದ್ದಾರೆ. 
ಕಸಾಯಿಖಾನೆಗಳನ್ನು ಬಂದ್ ಮಾಡಿಸುವ ಸರ್ಕಾರದ ನಿರ್ಧಾರದ ವಿರುದ್ಧ ಹಲವು ಮಾಂಸ ಮಾರಾಟಗಾರರ ಸಂಘಟನೆಗಳು ಉತ್ತರಪ್ರದೇಶದಲ್ಲಿ ಪ್ರತಿಭಟನೆ ನಡೆಸುತ್ತಿದ್ದವು. ಈ ಹಿನ್ನಲೆಯಲ್ಲಿ ಯೋಗಿ ಆದಿತ್ಯನಾಥ್ ಅವರು ಇಂದು ಮಾಂಸ ಮಾರಾಟಗಾರರೊಂದಿಗೆ ಲಖನೌನಲ್ಲಿರುವ ತಮ್ಮ ಅಧಿಕೃತ ನಿವಾಸದಲ್ಲಿ ಇಂದು ಸಂಜೆ 6 ಗಂಟೆ ಸುಮಾರಿಗೆ ಮಾತುಕತೆ ನಡೆಸಲಿದ್ದಾರೆ. 
ಅಕ್ರಮವಾಗಿ ನಡೆಸಲಾಗುತ್ತಿರುವ ಕಸಾಯಿಖಾನೆಗಳನ್ನು ಸಹಿಸಲು ಸಾಧ್ಯವಿಲ್ಲ. ಇಂತಹ ಚಟುವಟಿಕೆಗಳಲ್ಲಿ ಭಾಗಿಯಾಗವ ಅಧಿಕಾರಿಗಳ ವಿರುದ್ಧವೂ ಸರ್ಕಾರ ಕ್ರಮ ಕೈಗೊಳ್ಳಲಿದೆ. ಈ ವಿಚಾರದಲ್ಲಿ ಯಾವುದೇ ಜಾತಿ, ಸಮುದಾಯ ಹಾಗೂ ಧರ್ಮವೆಂಬ ಯಾವುದೇ ತಾರತಮ್ಯವಿಲ್ಲ. 
ಈಗಾಗಲೇ ಮಾಂಸ ಮಾರಾಟಗಾರರ ಹಿತಾಸಕ್ತಿಗಳನ್ನು ಮುಖ್ಯಮಂತ್ರಿಗಳು ಕೇಳಿದ್ದಾರೆ. ಮಾಂಸ ಮಾರಾಟಗಾರರು ಹಾಗೂ ಮುಖ್ಯಮಂತ್ರಿಗಳ ನಡುವಿನ ಭೇಟಿ ಧನಾತ್ಮಕವಾಗಿರಲಿದೆ. ಎಲ್ಲಾ ಸಂಘಟನೆಗಳ ಮುಖ್ಯಸ್ಥರೂ ಮುಖ್ಯಮಂತ್ರಿಗಳಿಗೆ ಬೆಂಬಲವನ್ನು ನೀಡಿದ್ದಾರೆ. ಭಾರತದ ಪ್ರಜೆಯಾಗಿ ದೇಶದಲ್ಲಿ ಅಕ್ರಮಗಳು ನಡೆಯದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿಯಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆಂದು ಸಿದ್ಧಾರ್ಥ್ ನಾಥ್ ಸಿಂಗ್ ಅವರು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com