ನವದೆಹಲಿ: ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಒಬ್ಬ '420', ಶೀಘ್ರದಲ್ಲೇ ಜೈಲು ಸೇರಲಿದ್ದಾರೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಮಂಗಳವಾರ ಹೇಳಿದ್ದಾರೆ.
ಕೇಜ್ರಿವಾಲ್ ವಿರುದ್ಧ ಮಾಜಿ ಸಚಿವ ಕಪಿಲ್ ಮಿಶ್ರಾ ಅವರು ಗಂಭೀರ ಆರೋಪ ಮಾಡಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಕೇಜ್ರಿವಾಲ್ ಒಬ್ಬ ವಂಚಕ '420' ಆಗಿದ್ದು, ಶೀಘ್ರದಲ್ಲಿಯೇ ಜೈಲು ಸೇರಲಿದ್ದಾರೆ. ಸುಧೀರ್ಘ ಜೈಲು ಶಿಕ್ಷೆ ಅನುಭವಿಸಲಿದ್ದಾರೆಂದು ಹೇಳಿದ್ದಾರೆ.
ಕೇಜ್ರಿವಾಲ್ ಏನೇ ಹೇಳಿದರೂ ರಕ್ಷಿಸಿಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಹಾಕಿಕೊಂಡಿದ್ದಾರೆ. ಮಾನನಷ್ಟ ಮೊಕದ್ದಮೆ ಸೇರಿದಂತೆ ಹಲವಾರು ಪ್ರಕರಣಗಳನ್ನು ಕೇಜ್ರಿವಾಲ್ ಅವರು ಎದುರಿಸುತ್ತಿದ್ದಾರೆ. ಹೀಗಾಗಿ ಕೇಜ್ರಿವಾಲ್ ಶೀಘ್ರವೇ ಜೈಲು ಸೇರಲಿದ್ದು, ದೀರ್ಘಕಾಲದವರೆಗೂ ಜೈಲಿನಲ್ಲಿ ಕಾಲ ಕಳೆಯಲಿದ್ದಾರೆಂದು ತಿಳಿಸಿದ್ದಾರೆ.
ಕೇಜ್ರಿವಾಲ್ ಅವರ ಸಂಪುಟದಲ್ಲಿಯೇ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದ ಕಪಿಲ್ ಮಿಶ್ರಾ ಅವರನ್ನು ಕೆಲ ದಿನಗಳ ಹಿಂದಷ್ಟೇ ವಜಾಗೊಳಿಸಲಾಗಿತ್ತು. ಇದರ ಬೆನ್ನಲ್ಲೇ ಕೇಜ್ರಿವಾಲ್ ಅವರು ಆರೋಗ್ಯ ಸಚಿವ ಸತ್ಯೇಂದ್ರ ಜೈನ್ ರಿಂದ ರೂ.2 ಕೋಟಿ ಲಂಚ ಪಡೆದಿದ್ದಾರೆಂದು ಮಿಶ್ರಾ ಗಂಭೀರ ಆರೋಪ ಮಾಡಿದ್ದಾರೆ. ಹೀಗಾಗಿ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕೆಂಬ ಒತ್ತಾಯಗಳು ವಿರೋಧ ಪಕ್ಷಗಳಿಂದ ಕೇಳಿಬರುತ್ತಿವೆ.