ಶ್ರೀನಗರ: ದಕ್ಷಿಣ ಕಾಶ್ಮೀರದ ಶೋಪಿಯಾನ್ ಟೌನ್ ಮತ್ತು ಶ್ರೀನಗನರ ನೌಶೆರಾ ಬಳಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ ಏರ್ಪಟ್ಟಿದೆ ಎಂದು ಶುಕ್ರವಾರ ತಿಳಿದುಬಂದಿದೆ.
ಶುಕ್ರವಾರವಾದ್ದರಿಂದ ನೌಶೆರಾದಲ್ಲಿರುವ ಜಾಮಿಯಾ ಮಸೀದಿಗೆ ಪ್ರಾರ್ಥನೆ ಸಲ್ಲಿಸಲು ಜನರು ಆಗಮಿಸಿದ್ದು. ಈ ವೇಳೆ ಕೆಲ ಯುವಕರ ಗುಂಪು ಘೋಷಣೆಗಳನ್ನು ಕೂಗಿದ್ದು, ಭದ್ರತಾ ಪಡೆಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆಂದು ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.
ಪ್ರತಿಭಟನಾಕಾರರನ್ನು ಹತ್ತಿಕ್ಕಲು ಭದ್ರತಾ ಪಡೆಗಳು ಅಶ್ರುವಾಯು ಪ್ರಯೋಗ ಮಾಡಿದ್ದಾರೆ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ ಎಂದು ತಿಳಿಸಿದ್ದಾರೆ.
ಇದರಂತೆಯೇ ಶೋಪಿಯಾನ್ ಜಿಲ್ಲೆ ಸಿಂಗ್ಲು ಚೌಕ್ ಹಾಗೂ ಬಂಡಿಪೋರ ಜಿಲ್ಲೆಯಲ್ಲಿಯೂ ಭಧ್ರತಾ ಪಡೆಗಳು ಹಾಗೂ ಪ್ರತಿಭಟನಾಕಾರರ ನಡುವೆ ಘರ್ಷಣೆ ನಡೆದಿರುವುದಾಗಿ ವರದಿಗಳು ತಿಳಿಸಿವೆ.