ನವದೆಹಲಿ: ಜಮ್ಮು-ಕಾಶ್ಮೀರದ ನೌಗಮ್ ವಲಯದಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಉಗ್ರಗಾಮಿಗಳ ಒಳನುಸುಳುವಿಕೆಯನ್ನು ಯಶಸ್ವಿಯಾಗಿ ನಾಶಪಡಿಸಿದ ಭಾರತೀಯ ಸೇನಾಪಡೆಯ ಕಾರ್ಯವನ್ನು ರಕ್ಷಣಾ ಸಚಿವ ಅರುಣ್ ಜೇಟ್ಲಿ ಶ್ಲಾಘಿಸಿದ್ದಾರೆ.
ಯೋಧರ ಕಾರ್ಯದ ಬಗ್ಗೆ ದೇಶ ಹೆಮ್ಮೆ ಪಡುತ್ತದೆ ಎಂದು ಜೇಟ್ಲಿ ಟ್ವಿಟ್ಟರ್ ನಲ್ಲಿ ಟ್ವೀಟ್ ಮಾಡಿದ್ದಾರೆ. ಭಯೋತ್ಪಾದಕ ವಿರೋಧಿ ಕಾರ್ಯಾಚರಣೆಯಲ್ಲಿ ಪ್ರಾಣ ಕಳೆದುಕೊಂಡ ಮೂವರು ಸೈನಿಕರಿಗೆ ಅವರು ಶ್ರದ್ಧಾಂಜಲಿ ಸಲ್ಲಿಸಿದ್ದಾರೆ.
ಕಳೆದ ಶನಿವಾರ ಆರಂಭಗೊಂಡ ಭಯೋತ್ಪಾದನಾ ವಿರೋಧಿ ಕಾರ್ಯಾಚರಣೆ ಸತತ 24 ಗಂಟೆಗಳ ಕಾಲ ಮುಂದುವರಿದಿತ್ತು. ಭಾರತ ಮತ್ತು ಪಾಕಿಸ್ತಾನ ನಡುವೆ ಬಿಗುವಿನ ವಾತಾವರಣ ನೆಲೆಸಿರುವಾಗಲೇ ಈ ಎನ್ ಕೌಂಟರ್ ನಡೆದಿದೆ.
ಗಡಿ ನಿಯಂತ್ರಣ ರೇಖೆ ಬಳಿಯಲ್ಲಿನ ಭಯೋತ್ಪಾದಕ ಚಟುವಟಿಕೆ ಭಾರತ ಮತ್ತು ಅದರ ಸಾರ್ವಭೌಮತ್ವಕ್ಕೆ ವಿರುದ್ಧವಾಗಿ ನಡೆಸಲಾಗುತ್ತಿದೆ. ಭಯೋತ್ಪಾದನೆ ಮತ್ತು ಉಗ್ರಗಾಮಿತ್ವ ಭಾರತದ ಸಾರ್ವಭೌಮತ್ವಕ್ಕೆ ಧಕ್ಕೆ ತರಲು ಮತ್ತು ಜಮ್ಮು-ಕಾಶ್ಮೀರದಲ್ಲಿ ಶಾಂತಿ ಕದಡಲು ನಡೆಸಲಾಗುತ್ತಿದೆ ಎಂದು ಹೇಳಿದರು.