ದೇಶದಲ್ಲಿರುವ ರೊಹಿಂಗ್ಯ ಮುಸ್ಲಿಮರನ್ನು ಗುರುತಿಸಿ ಗಡಿಪಾರು ಮಾಡಬೇಕು ಎನ್ನುವ ಕೇಂದ್ರ ಸರ್ಕಾರದ ನಿರ್ಧಾರಕ್ಕೆ ವಿರುದ್ಧವಾಗಿ ಸಲ್ಲಿಕೆಯಾಗಿರುವ ಅರ್ಜಿಗಳ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರ ನೇತೃತ್ವದಲ್ಲಿ ತ್ರಿಸದಸ್ಯ ಪೀಠವನ್ನು ರಚನೆ ಮಾಡಲಾಗಿದೆ ಎಂದು ತಿಳಿದುಬಂದಿದೆ. ಅಂತೆಯೇ ನೂತನ ಪೀಠದಲ್ಲಿ ಇದೇ ಅಕ್ಟೋಬರ್ 13ರಿಂದ ವಿಚಾರಣೆ ಆರಂಭವಾಗಲಿದೆ.
ಈ ಹಿಂದೆ ರೋಹಿಂಗ್ಯ ಮುಸ್ಲಿಮರ ಗಡಿಪಾರು ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಗೆ ಅಫಿಡವಿಟ್ ಸಲ್ಲಿಸಿದ್ದ ಕೇಂದ್ರ ಸರ್ಕಾರ, ರೊಹಿಂಗ್ಯ ಮುಸ್ಲಿಮರಿಗೆ ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆಗಳೊಂದಿಗೆ ಸಂಪರ್ಕವಿದ್ದು, ಇವರನ್ನು ನಿರಾಶ್ರಿತರು ಎಂದು ಪರಿಗಣಿಸುವುದರಿಂದ ದೇಶದ ಭದ್ರತೆಗೆ ಧಕ್ಕೆಯಾಗಲಿದೆ. ಹೀಗಾಗಿ ಇವರನ್ನು ಅಕ್ರಮ ವಲಸಿಗರು ಎಂದು ಪರಿಗಣಿಸಿ ದೇಶದಿಂದ ಗಡಿಪಾರು ಮಾಡುವುದಾಗಿ ಕೇಂದ್ರ ಸರ್ಕಾರ ಈ ಹಿಂದೆ ಅಟಾರ್ನಿ ಜನರಲ್ ಮೂಲಕ ಅಫಿಡವಿಟ್ ಸಲ್ಲಿಕೆ ಮಾಡಿತ್ತು.