ಲಖನೌ: ತಮ್ಮ ಪುತ್ರಿ ಆರುಷಿ ಹಾಗೂ ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆ ಪ್ರಕರಣದಲ್ಲಿ ನಮಗೆ ನ್ಯಾಯ ಸಿಕ್ಕಿದ್ದು, ಸಂತೋಷವಾಗಿದೆ ಎಂದು ಜೋಡಿ ಕೊಲೆ ಪ್ರಕರಣದಲ್ಲಿ ಖುಲಾಸೆಗೊಂಡಿರುವ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅವರು ಹೇಳಿದ್ದಾರೆ.
ಇಂದು ಅಲಹಾಬಾದ್ ಹೈಕೋರ್ಟ್ ಖುಲಾಸೆಗೊಳಿಸಿ ಮಹತ್ವದ ತೀರ್ಪು ನೀಡಿದ ಬಳಿಕ ಪ್ರತಿಕ್ರಿಯಿಸಿರುವ ತಲ್ವಾರ್ ದಂಪತಿ, ತಮಗೆ ಸಂತೋಷವಾಗಿದ್ದು, ಕೊನೆಗೆ ನ್ಯಾಯ ಸಿಕ್ಕಿದೆ ಎಂದು ಹೇಳಿರುವುದಾಗಿ ದಾಸ್ನಾ ಜೈಲಿನ ಜೈಲರ್ ಡಿ ಆರ್ ಮೌರ್ಯ ಅವರು ತಿಳಿಸಿದ್ದಾರೆ.
ಆರುಷಿ ಹಾಗೂ ಮನೆ ಕೆಲಸದಾತ ಹೇಮರಾಜ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ಕೋರ್ಟ್ ರಾಜೇಶ್ ದಂಪತಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು. ಅದನ್ನು ಪ್ರಶ್ನಿಸಿ ರಾಜೇಶ್ ತಲ್ವಾರ್ ಮತ್ತು ನೂಪುರ್ ತಲ್ವಾರ್ ಅಲಹಬಾದ್ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಆರೋಪಿಗಳನ್ನು ಖುಲಾಸೆಗೊಳಿಸಿದೆ. ಅಲ್ಲದೆ ರಾಜೇಶ್ ಮತ್ತು ನೂಪುರ್ ಅವರೇ ಈ ಜೋಡಿ ಕೊಲೆ ಮಾಡಿದ್ದಾರೆ ಎಂಬುದಕ್ಕೆ ಯಾವುದೇ ಸೂಕ್ತ ಸಾಕ್ಷ್ಯಾಧಾರಗಳಿಲ್ಲ. ಹೀಗಾಗಿ ರಾಜೇಶ್ ಮತ್ತು ನೂಪುರ್ ದಂಪತಿ ತಮ್ಮ ಮಗಳು ಮತ್ತು ಮನೆ ಕೆಲಸದ ಸಹಾಯಕ ಹೇಮರಾಜ್ ಕೊಲೆಯ ಹೊಣೆಗಾರರಲ್ಲ ಎಂದು ನ್ಯಾಯಪೀಠ ಹೇಳಿದೆ.