ನವದೆಹಲಿ: ನಾವು ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡ (ಎಸ್'ಸಿ/ಎಸ್'ಟಿ) ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ನೀಡಲಾಗಿದ್ದ ಆದೇಶಕ್ಕೆ ತಡೆ ನೀಡಲು ಸುಪ್ರೀಂಕೋರ್ಟ್ ಮಂಗಳವಾರ ನಿರಾಕರಿಸಿದೆ.
ಎಸ್'ಸಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆ ಕುರಿತಂತೆ ಈ ಹಿಂದೆ ಸುಪ್ರೀಂಕೋರ್ಟ ನೀಡಿದ್ದ ಆದೇಶ ಬಗ್ಗೆ ವಿರೋಧ ಪಕ್ಷಗಳು ಸೇರಿದಂತೆ ದೇಶದಾದ್ಯಂತ ತೀವ್ರ ವಿರೋಧಗಳು ವ್ಯಕ್ತವಾದ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಮರು ಪರಿಶೀಲನಾ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸುಪ್ರೀಂಕೋರ್ಟ್ ಪರಿಗಣಿಸಿತ್ತು.
ಇದರಂತೆ ಇಂದು ವಿಚಾರಣೆ ನಡೆಸಿರುವ ಸುಪ್ರೀಂಕೋರ್ಟ್, ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ್ದು, ಎಲ್ಲಾ ಪಕ್ಷಗಳೂ ಎರಡು ದಿನಗಳೊಳಗಾಗಿ ಪ್ರತಿಕ್ರಿಯೆಗಳನ್ನು ನೀಡುವಂತೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ.
ನಾವು ಎಸ್'ಸಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆಯ ವಿರುದ್ಧವಿಲ್ಲ, ನಮ್ಮ ತೀರ್ಪಿನ ಉದ್ದೇಶ ಅಮಾಯಕರ ರಕ್ಷಣೆಯಾಗಿದೆ. ಪ್ರಸ್ತುತ ತೀರ್ಪಿನ ವಿರುದ್ಧ ಪ್ರತಿಭಟನೆ ನಡೆಸುತ್ತಿರುವವರು ನ್ಯಾಯಾಲಯದ ತೀರ್ಪವನ್ನು ಸರಿಯಾಗಿ ಓದಿಲ್ಲ ಎಂದು ಅಭಿಪ್ರಾಯಪಟ್ಟಿದೆ.
ಮಾ.22 ರಂದು ನೀಡಿದ್ದ ತೀರ್ಪಿನಲ್ಲಿ ಸುಪ್ರೀಂಕೋರ್ಟ್ ಎಸ್'ಸಿ/ಎಸ್'ಟಿ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ನೀಡಿದ ತಕ್ಷಣ ಆರೋಪಿ ಬಂಧನ ಸರಿಯಲ್ಲ. ದೌರ್ಜನ್ಯ ಪ್ರಕರಣ ದಾಖಲಾಗುತ್ತಿದ್ದಂತೆಯೇ ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಳ್ಳುವ ಮೊದಲು ಪೊಲೀಸರು ಘಟನೆ ನಡೆದ 7 ದನಗಳೊಳಗೆ ಪ್ರಾಥಮಿಕ ತನಿಖೆ ನಡೆಸಬೇಕು ಎಂದು ಹೇಳಿತ್ತು.
ನ್ಯಾಯಾಲಯದ ಈ ತೀರ್ಪಿಗೆ ರಾಷ್ಟ್ರದಾದ್ಯಂತ ತೀವ್ರ ಆಕ್ರೋಶಗಳು ವ್ಯಕ್ತವಾಗಿದ್ದವು. ಹಲವು ರಾಜ್ಯಗಳಲ್ಲಿ ದಲಿತ ಪರ ಸಂಘಟನೆಗಳು ಪ್ರತಿಭಟನೆ ನಡೆಸಿದ್ದವು. ಈ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಹಲವರು ಸಾವನ್ನಪ್ಪಿದ್ದರು.