ನವದೆಹಲಿ : ಪ್ರಧಾನಿ ನರೇಂದ್ರಮೋದಿ ನೇತೃತ್ವದ ಎನ್ ಡಿಎ ಸರ್ಕಾರದ ನಾಲ್ಕನೇ ವರ್ಷಾಚರಣೆಯನ್ನು ದೇಶಾದ್ಯಂತ ವಿಜೃಂಭಣೆಯಿಂದ ಆಚರಿಸಲು ಬಿಜೆಪಿ ಭರದ ಸಿದ್ಧತೆ ನಡೆಸಿದೆ.
ಮುಂಬರುವ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ಈ ವರ್ಷಾಚರಣೆ ಆಚರಿಸುತ್ತಿದ್ದು, ಕಳೆದ ನಾಲ್ಕು ವರ್ಷಗಳಲ್ಲಿ ಸರ್ಕಾರದ ಸಾಧನೆಗಳನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರಮೋದಿ ಸಮಾವೇಶಗಳಲ್ಲಿ ಮಾತನಾಡಲಿದ್ದಾರೆ.
ರಾಜಸ್ತಾನ, ಮಧ್ಯಪ್ರದೇಶ ಸೇರಿದಂತೆ ವಿಧಾನಸಭಾ ಚುನಾವಣೆ ನಡೆಯಲಿರುವ ರಾಜ್ಯಗಳಲ್ಲಿ ಸಮಾವೇಶವನ್ನುದ್ದೇಶಿಸಿ ಮೋದಿ ಭಾಷಣ ಮಾಡಲಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.
ಈ ವರ್ಷಾಚರಣೆ ಅಂಗವಾಗಿ ಕಾರ್ಯತಂತ್ರ ರೂಪಿಸಲು ನಿತಿನ್ ಗಡ್ಕರಿ, ಪಿಯೂಷ್ ಗೊಯೆಲ್, ಧರ್ಮೆಂದ್ರ ಪ್ರಧಾನ್, ಮತ್ತು ಸ್ಮೃತಿ ಇರಾನಿ ಅವರನ್ನೊಳಗೊಂಡ ನಾಲ್ಕು ಸಚಿವರನ್ನು ಒಳಗೊಂಡ ಸಮಿತಿಯನ್ನು ರಚಿಸಲಾಗಿದೆ.
ವಿವಿಧ ಸಾಮಾಜಿಕ ಜಾಲತಾಣಗಳ ಮೂಲಕ ಮೋದಿ ಸರ್ಕಾರದ ಸಾಧನೆಗಳನ್ನು ತಿಳಿಸುವ ಪ್ರಯತ್ನ ಮಾಡಲಾಗುತ್ತಿದೆ. ಕಿರುಹೊತ್ತಿಗೆಯನ್ನು ಸಹ ಬಿಡುಗಡೆ ಮಾಡಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸಮಾಜದ ತಳ ವರ್ಗದ ಅಭಿವೃದ್ಧಿಗಾಗಿ ಸರ್ಕಾರ ಕೈಗೊಂಡಿರುವ ಯೋಜನೆಗಳ ಬಗ್ಗೆ ಅರಿವು ಮೂಡಿಸಲಾಗುತ್ತಿದೆ. ಉಜ್ವಲ, ಸೌಭಾಗ್ಯ , ಪ್ರಧಾನಮಂತ್ರಿ ಅವಾಸ್ ಯೋಜನೆ ಮತ್ತಿತರ ಪ್ರಮುಖ ಯೋಜನೆಗಳ ಫಲಾನುಭವಿಗಳೊಂದಿಗೆ ದೊಡ್ಡ ಷೋ ಒಂದನ್ನು ಆಯೋಜಿಸಲಾಗುತ್ತಿದೆ
Advertisement