ಉನ್ನಾವೊ : ಉತ್ತರ ಪ್ರದೇಶದ ಉನ್ನಾವೊ ಜಿಲ್ಲೆಯ ಅತ್ಯಾಚಾರ ಹಾಗೂ ಸಂತ್ರಸ್ತೆಯ ತಂದೆಯ ಸಾವು ಪ್ರಕರಣದ ಬಗ್ಗೆ ಅಲಹಾಬಾದ್ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದೆ.
ಈ ಪ್ರಕರಣದ ವಿಚಾರಣೆಯನ್ನು ನಾಳೆಗೆ ಮುಂದೂಡಿದ್ದು, ಪ್ರಕರಣದ ಸಂಬಂಧ ನ್ಯಾಯಾಲಯದ ಸ್ನೇಹಿತರೊಬ್ಬರನ್ನು ನೇಮಕ ಮಾಡಿದೆ.
ಸಂತ್ರಸ್ತೆಯ ತಂದೆ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗರ್ ವಿರುದ್ಧ ಆರೋಪ ಮಾಡಿ ಸೋಮವಾರ ಜೈಲಿನಲ್ಲಿಯೇ ಮೃತಪಟ್ಟಿದ್ದರು.
ಈ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸುಪ್ರಿಂಕೋರ್ಟಿಗೆ ವಕೀಲರೊಬ್ಬರು ಅರ್ಜಿ ಸಲ್ಲಿಸಿದ್ದು, ಸಂತ್ರಸ್ತೆಯ ಕುಟುಂಬಕ್ಕೆ ಪರಿಹಾರ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ಬಿಜೆಪಿ ಶಾಸಕ ಹಾಗೂ ಅವರ ಸಹಚರರು ಅತ್ಯಾಚಾರ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತೆಯ ಕುಟುಂಬ ಸದಸ್ಯರು ಭಾನುವಾರ ಲಕ್ನೋದಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಅದಿತ್ಯನಾಥ್ ಅವರ ನಿವಾಸದ ಬಳಿ ಆತ್ಮಹತ್ಯೆಗೆ ಯತ್ನಿಸಿದ್ದರು.
ಈ ಘಟನೆ ಬಳಿಕ ಸಂತ್ರಸ್ತೆಯ ತಂದೆಯನ್ನು ಏಪ್ರಿಲ್ .8 ರಂದು ವಿಚಾರಣೆಗಾಗಿ ಪೊಲೀಸರು ತೆಗೆದುಕೊಂಡಿದ್ದರು. ನಂತರ ಅನಾರೋಗ್ಯ ಕಾಣಿಸಿಕೊಂಡಿದ್ದರಿಂದ ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ. ಸೋಮವಾರ ಮುಂಜಾನೆ ಅವರು ಮೃತಪಟ್ಟಿದ್ದರು.
ಆದಾಗ್ಯೂ, ಆರೋಪಕ್ಕೆ ಗುರಿಯಾಗಿರುವ ಬಿಜೆಪಿ ಶಾಸಕನನ್ನು ಇನ್ನೂ ಬಂಧಿಸಿಲ್ಲ.
Advertisement