ನವದೆಹಲಿ : ಕಥುವಾ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಅಲ್ಲಿನ ವಕೀಲರನ್ನು ಸಂಪರ್ಕಿಸಿ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಸುಪ್ರೀಂಕೋರ್ಟ್ ನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರಾ ಬಳಿ ಸುಪ್ರೀಂಕೋರ್ಟ್ ನ ವಕೀಲರ ತಂಡವೊಂದು ಮನವಿ ಸಲ್ಲಿಸಿದೆ.
ಕುಥುವಾ ಅತ್ಯಾಚಾರ ಪ್ರಕರಣದಿಂದ ಉಂಟಾಗಿರುವ ಕಾನೂನು ಸುವ್ಯವಸ್ಥೆ ಸಂಬಂಧ ಜಮ್ಮು ವಕೀಲರಿಂದ ಮಾಹಿತಿ ಪಡೆಯಬಹುದು ಎಂದು ವಕೀಲ ಪಿ. ವಿ. ದಿನೇಶ್ ಸುಪ್ರೀಂಕೋರ್ಟ್ ಗೆ ತಿಳಿಸಿದ್ದು, ಈ ಸಂಬಂಧ ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳುವಂತೆ ಮುಖ್ಯ ನ್ಯಾಯಾಧೀಶರ ಬಳಿ ಮನವಿ ಮಾಡಿಕೊಂಡಿದ್ದಾರೆ.
ಈ ಪ್ರಕರಣದ ವಿಚಾರಣೆ ನಡೆಸುವುದಾಗಿ ಮುಖ್ಯ ನ್ಯಾಯಾಧೀಶರ ನೇತೃತ್ವದ ವಿಭಾಗೀಯ ಪೀಠ ತಿಳಿಸಿದೆ.
ಘಟನೆ ಸಂಬಂಧ ತನಿಖೆಗಾಗಿ ವಿಶೇಷ ತಂಡವೊಂದು ರಚಿಸಲಾಗಿದ್ದು, 8 ಜನರನ್ನು ಬಂಧಿಸಲಾಗಿದೆ. ಸಾಕ್ಷ್ಯನಾಶ ಸಂಬಂಧ ಇಬ್ಬರು ವಿಶೇಷ ಪೊಲೀಸ್ ಅಧಿಕಾರಿಗಳು ಹಾಗೂ ಹೆಡ್ ಕಾನ್ಸ್ ಟೇಬಲ್ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ.
ಮುಸ್ಲಿಂ ಸಮುದಾಯದ ಬಾಲಕಿ ಜನವರಿ 10 ರಂದು ಮನೆಯಿಂದ ನಾಪತ್ತೆಯಾಗಿದ್ದಳು, ವಾರದ ಬಳಿಕ ಆದೇ ಸ್ಥಳದಲ್ಲಿ ಆಕೆಯ ಮೃತದೇಹ ಪತ್ತೆಯಾಗಿತ್ತು. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಜಮ್ಮು-ಕಾಶ್ಮೀರ ಮಾಜಿ ಮುಖ್ಯಮಂತ್ರಿ ಒಮಾರ್ ಅಬ್ದುಲ್ಲಾ ಪ್ರಶ್ನಿಸಿದ್ದಾರೆ.
Advertisement