'ಭಾರತದಂತಹ ದೊಡ್ಡ ದೇಶದಲ್ಲಿ ಅತ್ಯಾಚಾರ ಸಾಮಾನ್ಯ' ಹೇಳಿಕೆ, ನಂತರ ಕೇಂದ್ರ ಸಚಿವರ ಯೂ-ಟರ್ನ್

ಭಾರತದಂತಹ ದೊಡ್ಡ ದೇಶದಲ್ಲಿ ಒಂದೆರಡು ಅತ್ಯಾಚಾರ ಸಾಮಾನ್ಯ. ಆದರೆ ಇದನ್ನೇ ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಬಾರದು ಎಂದು ಹೇಳುವ ಮೂಲಕ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್ ಹೊಸ ವಿವಾದ ಸೃಷ್ಟಿಸಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ನವದೆಹಲಿ: ಭಾರತದಂತಹ ದೊಡ್ಡ ದೇಶದಲ್ಲಿ ಒಂದೆರಡು ಅತ್ಯಾಚಾರ ಸಾಮಾನ್ಯ. ಆದರೆ ಇದನ್ನೇ ಮಾಧ್ಯಮಗಳು ದೊಡ್ಡದಾಗಿ ಬಿಂಬಿಸಬಾರದು ಎಂದು ಹೇಳುವ ಮೂಲಕ ಕೇಂದ್ರ  ಸಚಿವ ಸಂತೋಷ್ ಗಂಗ್ವಾರ್ ಹೊಸ ವಿವಾದ ಸೃಷ್ಟಿಸಿದ್ದಾರೆ.
ಭಾನುವಾರ ಮಾಧ್ಯಮದವರ ಅತ್ಯಾಚಾರ ಪ್ರಕರಣಗಳ ಸಂಬಂಧದ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸಚಿವ ಸಂತೋಷ್ ಗಂಗ್ವಾರ್, ‘ಇಂತಹ ಪ್ರಕರಣಗಳು ದುರಾದೃಷ್ಟಕರ. ಕೆಲವು ಬಾರಿ ಇಂತಹ ಪ್ರಕರಣಗಳನ್ನು ತಡೆಯಲು ಸಾಧ್ಯವಾಗುವುದಿಲ್ಲ. ಇಂತಹ ಪ್ರಕರಣಗಳನ್ನು ನಿಯಂತ್ರಿಸಲು ಸರ್ಕಾರ ಕಾರ್ಯನಿರತವಾಗಿದ್ದು, ಅಗತ್ಯ ಕ್ರಮ ಕೈಗೊಳ್ಳುತ್ತಿದೆ. ಅಂತೆಯೇ ಭಾರತದಂತಹ ದೊಡ್ಡ ದೇಶದಲ್ಲಿ ಒಂದೆರಡು ಘಟನೆಗಳನ್ನು ದೊಡ್ಡದಾಗಿ ಬಿಂಬಿಸುವ ಅಗತ್ಯವಿಲ್ಲ' ಎಂದು ಹೇಳಿದ್ದಾರೆ.
ಕಥುವಾ ಹಾಗೂ ಉನ್ನಾವ್ ಅತ್ಯಾಚಾರ ಪ್ರಕರಣಗಳ ವಿರುದ್ಧ ದೇಶದಲ್ಲಿ ದೊಡ್ಡ ಮಟ್ಟದ ಕೂಗು ಎದ್ದಿರುವ ಸಂದರ್ಭದಲ್ಲೇ ಕೇಂದ್ರ ಸಚಿವರ ಈ ಹೇಳಿಕೆ ಸಾಕಷ್ಟು ವಿವಾದಕ್ಕೆ ಕಾರಣವಾಗಿದೆ.
ಕೇಂದ್ರ ಸಚಿವರ ಹೇಳಿಕೆಗೆ ವ್ಯಾಪಕ ವಿರೋಧ ವ್ಯಕ್ತವಾದ ಬೆನ್ನಲ್ಲೇ ಎಚ್ಚೆತ್ತ ಕೇಂದ್ರ ಸಚಿವ ಗಂಗ್ವಾರ್, ನಾನು ಮೊದಲೇ ನನ್ನ ಹೇಳಿಕೆಯನ್ನು ತಿರುಚಬೇಡಿ ಎಂದ ಹೇಳಿದ್ದೆ. ಮಾಧ್ಯಮಗಳು ಇಂತಹ ಸೂಕ್ಷ್ಮ ವಿಚಾರಗಳಲ್ಲಿ ಜವಾಬ್ದಾರಿಯುತವಾಗಿ ವರ್ತಿಸಬೇಕು. ಇದು ತುಂಬಾ ಸೂಕ್ಷ್ಮವಾದ ವಿಚಾರವಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವದಲ್ಲಿ ಕೇಂದ್ರ ಸರ್ಕಾರ ಕಠಿಣಕ್ರಮಗಳನ್ನು ಕೈಗೊಳ್ಳುತ್ತಿದೆ. ಮಹಿಳೆಯರು ಮತ್ತು ಮಕ್ಕಳ ರಕ್ಷಣೆಗಾಗಿ ಸುಗ್ರೀವಾಜ್ಞೆ ಮೂಲಕ ಮತ್ತೊಂದು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ಟ್ವೀಟ್ ಮಾಡಿದ್ದಾರೆ.
ಇದಕ್ಕೂ ಮುನ್ನ ಪೋಸ್ಕೋ ಕಾಯಿದೆ ತಿದ್ದುಪಡಿಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಹೊರಡಿಸಿರುವ ಸುಗ್ರೀವಾಜ್ಞೆಯನ್ನು ಟ್ವಿಟರ್ ಮೂಲಕ ಸ್ವಾಗತಿಸಿರುವ ಸಚಿವರು, ‘12 ವರ್ಷದೊಳಗಿನ ಹೆಣ್ಣು ಮಕ್ಕಳ ಮೇಲೆ ಅತ್ಯಾಚಾರ ಎಸಗಿದವರಿಗೆ ಗಲ್ಲು ಶಿಕ್ಷೆ ಹಾಗೂ 16 ವರ್ಷದೊಳಗಿನ ಮಕ್ಕಳ ಮೇಲಿನ ಅತ್ಯಾಚಾರಿಗಳಿಗೆ 10 ವರ್ಷದಿಂದ 20 ವರ್ಷ ಹಾಗೂ ಜೀವಾವಧಿ ಶಿಕ್ಷೆ ವಿಧಿಸುವ ಈ ತಿದ್ದುಪಡಿಯನ್ನು ಸ್ವಾಗತಿಸುತ್ತೇನೆ. ಈ ಕ್ರಮದಿಂದ ಸಮಾಜದಲ್ಲಿ ಇಂತಹ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಬಹುದಾಗಿದೆ. ಈ ಅಪರಾಧದ ವಿರುದ್ಧ ನಾವೆಲ್ಲರೂ ಎದ್ದು ನಿಲ್ಲಬೇಕು’ ಎಂದು ತಿಳಿಸಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com