ಚೆನ್ನೈ: ವಯೋಸಹಜ ಕಾಯಿಲೆಯಿಂದ ಬಳಲುತ್ತಿರುವ ತಮಿಳುನಾಡು ಮಾಜಿ ಮುಖ್ಯಮಂತ್ರಿ ಹಾಗೂ ಡಿಎಂಕೆ ಮುಖ್ಯಸ್ಥ ಎಂ. ಕರುಣಾನಿಧಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಚಿಂತಾಜನಕವಾಗಿದ್ದು, ಚೆನ್ನೈನಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.
ಕಾವೇರಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ 94 ವರ್ಷದ ಕರುಣಾನಿಧಿ ಅವರ ಆರೋಗ್ಯ ಮತ್ತಷ್ಟು ಕ್ಷೀಣಿಸಿದ್ದು, ಅಂಗಾಂಗಳ ಕಾರ್ಯನಿರ್ವಹಣೆಯೂ ಕ್ಷೀಣಿಸಿದೆ ಎಂದು ಆಸ್ಪತ್ರೆ ಪ್ರಕಟಣೆಯಲ್ಲಿ ತಿಳಿಸಿದೆ.
ಈ ಮಧ್ಯೆ, ಕರುಣಾನಿಧಿ ಅವರ ಪುತ್ರ ಎಂ.ಕೆ.ಸ್ಟಾಲಿನ್ ಹಾಗೂ ಪುತ್ರಿ ಕನ್ನಿಮೋಳಿ ಮತ್ತು ಡಿಎಂಕೆ ಮುಖಂಡರು, ಮುಖ್ಯಮಂತ್ರಿ ಎಡಪ್ಪಾಡಿ ಪಳನಿಸ್ವಾಮಿ ಅವರನ್ನ ಭೇಟಿಯಾಗಲು ತೆರಳಿದ್ದು, ಸಿಎಂ ಜತೆ ಮಹತ್ವದ ಸಭೆ ನಡೆಸುತ್ತಿದ್ದಾರೆ.
ಇನ್ನು ಆಸ್ಪತ್ರೆ ಒಳಗೆ ಮತ್ತು ಹೊರಗೆ ಭಾರಿ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜಿಸಲಾಗಿದ್ದು, ರಾಜರತಿನಂ ಸ್ಟೇಡಿಯಂನಲ್ಲಿ ಸುಮಾರು 1200 ಪೊಲೀಸ್ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ಇದರ ಜೊತೆಗೆ 500 ಸಶಸ್ತ್ರ ಪಡೆ ಮತ್ತು 700 ಸ್ಪೇಷಲ್ ಫೋರ್ಸ್ ಕಾರ್ಯ ನಿರ್ವಹಿಸುತ್ತಿದೆ. ಮುಂಜಾಗ್ರತಾ ಕ್ರಮವಾಗಿ ತಮಿಳುನಾಡಿನಾದ್ಯಂತ ಹೈಅಲರ್ಟ್ ಘೋಷಣೆ ಮಾಡಲಾಗಿದೆ.
ತೀವ್ರ ಜ್ವರ ಹಾಗೂ ರಕ್ತದೊತ್ತಡ ಸಮಸ್ಯೆಯಿಂದಾಗಿ ಕರುಣಾನಿಧಿ ಜುಲೈ 28 ರಂದು ಆಸ್ಪತ್ರೆಗೆ ದಾಖಲಾಗಿದ್ದರು.