ನವದೆಹಲಿ: ಕಳೆದ ಮಾರ್ಚ್ ತಿಂಗಳಲ್ಲಿ ಆದಾಯ ತೆರಿಗೆ ಇಲಾಖೆ ಹೊರಡಿಸಿದ್ದ ಆದಾಯ ತೆರಿಗೆ ಮರು ಮೌಲ್ಯಮಾಪನ ನೊಟೀಸ್ ಗೆ ಸಂಬಂಧಪಟ್ಟಂತೆ ದೆಹಲಿ ಹೈಕೋರ್ಟ್ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಗೆ ಮಧ್ಯಂತರ ಜಾಮೀನು ನೀಡಲು ನಿರಾಕರಿಸಿದೆ.
ಕಾಂಗ್ರೆಸ್ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿಯವರು ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವ ನ್ಯಾಷನಲ್ ಹೆರಾಲ್ಡ್ ಕೇಸಿಗೆ ಸಂಬಂಧಪಟ್ಟಂತೆ ಕೂಡ ಮಾಧ್ಯಮ ವರದಿಗಳಿಗೆ ತಡೆ ನೀಡಲು ನ್ಯಾಯಾಲಯ ನಿರಾಕರಿಸಿದೆ.
ನ್ಯಾಶನಲ್ ಹೆರಾಲ್ಡ್ ಮತ್ತು ಯಂಗ್ ಇಂಡಿಯಾ ಪತ್ರಿಕೆಗಳ ಹಣಕಾಸಿನ ವಹಿವಾಟಿಗೆ ಸಂಬಂಧಪಟ್ಟಂತೆ ತೆರಿಗೆ ಮೌಲ್ಯಮಾಪನವನ್ನು ಮತ್ತೆ ಮಾಡುವಂತೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳ ಆದೇಶವನ್ನು ಪ್ರಶ್ನಿಸಿ ದೆಹಲಿ ನ್ಯಾಯಾಲಯಕ್ಕೆ ರಾಹುಲ್ ಗಾಂಧಿ ಅರ್ಜಿ ಸಲ್ಲಿಸಿದ್ದರು. ದೆಹಲಿ ಹೈಕೋರ್ಟ್ ಮುಂದಿನ ವಿಚಾರಣೆಯನ್ನು ಆಗಸ್ಟ್ 14ಕ್ಕೆ ಮುಂದೂಡಿದೆ.
ಕಳೆದ ಮಾರ್ಚ್ ನಲ್ಲಿ 2011-12ನೇ ಆರ್ಥಿಕ ಸಾಲಿನ ಆದಾಯ ತೆರಿಗೆ ಮರುಮೌಲ್ಯಮಾಪನಕ್ಕೆ ಸಂಬಂಧಪಟ್ಟಂತೆ ರಾಹುಲ್ ಗಾಂಧಿಗೆ ನೊಟೀಸ್ ಜಾರಿ ಮಾಡಲಾಗಿತ್ತು. ಯಂಗ್ ಇಂಡಿಯಾದ ನಿರ್ದೇಶಕರ ಹೆಸರನ್ನು ರಾಹುಲ್ ಗಾಂಧಿ ಬಹಿರಂಗಪಡಿಸಿಲ್ಲ ಎಂದು ಆದಾಯ ತೆರಿಗೆ ಇಲಾಖೆ ಆರೋಪಿಸಿತ್ತು.
ಎಐಸಿಸಿ ಕಡೆಯಿಂದ ಅಸೋಸಿಯೇಟ್ ಜರ್ನಲ್ ಲಿಮಿಟೆಡ್ ಗೆ 99 ಕೋಟಿ ರೂಪಾಯಿ ಸಂದಾಯವಾಗಿದ್ದು, ರಾಹುಲ್ ಗಾಂಧಿಯವರೇ ಯಂಗ್ ಇಂಡಿಯಾ ನಿರ್ದೇಶಕರಾಗಿರುವುದರಿಂದ ಉದ್ದೇಶಪೂರ್ವಕವಾಗಿ ಅವರು ಹೆಸರು ಬಹಿರಂಗಪಡಿಸಿಲ್ಲ ಎನ್ನುತ್ತಾರೆ.
Advertisement