ಶ್ರೀನಗರ: ನ್ಯಾಷನಲ್ ಕಾನ್ಫರೆನ್ಸ್ ನಾಯಕ ಮತ್ತು ಮಾಜಿ ಸಚಿವ ಅಬ್ದುಲ್ ರಹೀಲ್ ರಾಥೆರ್ ಅವರ ಮೇಲೆ ಉಗ್ರರು ದಾಳಿ ನಡೆಸಿರುವ ಘಟನೆ ಮಂಗಳವಾರ ನಡೆದಿದೆ.
ಕಾಶ್ಮೀರದ ಬುದ್ಗಾಮ್ ಜಿಲ್ಲೆಯಲ್ಲಿರುವ ಅಬ್ದುಲ್ ರಹೀಮ್ ಅವರ ಮೇಲೆ ಉಗ್ರರು ದಾಳಿ ನಡೆಸಿದ್ದು, ಭದ್ರತಾ ಪಡೆಗಳ ಬಂದೂಕುಗಳನ್ನು ಕಿತ್ತುಕೊಳ್ಳಲು ಯತ್ನ ನಡೆಸಿದ್ದಾರೆ. ಈ ವೇಳೆ ಉಗ್ರರಿಗೆ ದಿಟ್ಟ ಉತ್ತರ ನೀಡಿರುವ ಭದ್ರತಾ ಪಡೆಗಳು ಉಗ್ರರನ್ನು ಹಿಮ್ಮೆಟ್ಟಿಸಿದ್ದಾರೆಂದು ವರದಿಗಳು ತಿಳಿಸಿವೆ.
ಬುದ್ಗಾಮ್ ಜಿಲ್ಲೆಯ ಬಂಡಿಪೊರಾದಲ್ಲಿರುವ ರಹೀಮ್ ಅವರ ನಿವಾಸದ ಬಳಿ ಇಂದು ಬೆಳಿಗ್ಗೆ ಬಂದಿರುವ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಿದ್ದಾರೆ. ಈ ವೇಳೆ ಉಗ್ರರಿಗೆ ದಿಟ್ಟ ಉತ್ತರ ನೀಡಿ ಉಗ್ರರು ಸ್ಥಳದಿಂದ ಕಾಲ್ಕಿತ್ತುವಂತೆ ಭದ್ರತಾ ಪಡೆಗಳು ಮಾಡಿದ್ದಾರೆ.
ಉಗ್ರರು ದಾಳಿ ನಡೆಸಿದ ಸಂದರ್ಭದಲ್ಲಿ ರಹೀಮ್ ಅವರು ಮನೆಯಲ್ಲಿರಲಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ.
ಈ ನಡುವೆ ಪೂಂಚ್ ಜಿಲ್ಲೆಯ ಮಂಧಾರ್ ಬಳಿಯಿರುವ ಗಡಿ ನಿಯಂತ್ರಣ ರೇಖೆ ಬಳಿ ಉಗ್ರರು ಅಡಗಿ ಕುಳಿತಿರುವ ಶಂಕೆಗಳು ವ್ಯಕ್ತವಾದ ಹಿನ್ನಲೆಯಲ್ಲಿ ಸೇನಾಪಡೆ ಭಾರೀ ಕಾರ್ಯಾಚರಣೆ ನಡೆಸುತ್ತಿದೆ.