ನವದೆಹಲಿ: ಮೇಕೆದಾಟು ಯೋಜನೆಗೆ ಅಡ್ಡಗಾಲು ಹಾಕಲು ಮುಂದಾಗಿದ್ದ ತಮಿಳುನಾಡಿಗೆ ಹಿನ್ನಡೆಯಾಗಿದ್ದು ಕರ್ನಾಟಕದ ಬಹುನಿರೀಕ್ಷಿತ ಯೋಜನೆಗೆ ಸುಪ್ರೀಂಕೋರ್ಟ್ ಅಸ್ತು ಎಂದಿದೆ.
ಮೇಕೆದಾಟು ಯೋಜನೆಗೆ ಕೇಂದ್ರ ಸರ್ಕಾರ ನೀಡಿರುವ ಒಪ್ಪಿಗೆ ತಡೆಹಿಡಿಯಬೇಕು ಎಂದು ತಮಿಳುನಾಡು ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಜಾ ಮಾಡಿರುವ ಸುಪ್ರೀಂಕೋರ್ಟ್ ಮೇಕೆದಾಟು ಯೋಜನೆಗೆ ತಡೆ ನೀಡುವುದಿಲ್ಲ. ಹಾಗೆ ತಮಿಳುನಾಡು ಸಹ ಅವಸರ ಪಡುವ ಅಗತ್ಯವೂ ಬೇಡ ಎಂದು ಹೇಳಿದೆ.
ಮೇಕೆದಾಟು ಯೋಜನೆ ಸಂಬಂಧ ಕೇಂದ್ರ ಜಲ ಆಯೋಗ ಸಮಗ್ರ ಯೋಜನಾ ವರದಿ(ಡಿಪಿಆರ್) ಕೇಳಿದೆ ಅಷ್ಟೇ. ಡಿಪಿಆರ್ ನಲ್ಲಿ ದೋಷವಿದ್ದರೆ ಆಕ್ಷೇಪಿಸಬಹುದು. ಡಿಪಿಆರ್ ನಲ್ಲಿ ತಕರಾರಿದ್ದರೆ ಅರ್ಜಿ ಹಾಕಿ, ಈಗಲೇ ಭಯಪಡುವ ಅಗತ್ಯವಿಲ್ಲ ಎಂದು ಸುಪ್ರಿಂಕೋರ್ಟ್ ಹೇಳಿದೆ.
ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಒಪ್ಪಿಗೆ ಸೂಚಿಸಿತ್ತು. ಆದರೆ ಇದಕ್ಕೆ ತಮಿಳುನಾಡು ಸರ್ಕಾರ ಅಪಸ್ಪರ ತೆಗೆದಿತ್ತು. 2013ರಲ್ಲಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮೇಕೆದಾಟು ಯೋಜನೆಗೆ ರೂಪುರೇಷೆ ಸಿದ್ಧಪಡಿಸಿತ್ತು.