ಕೌರಲಿ: ಅಶೋಕ್ ಗ್ಲೆಹೊಟ್ ರಾಜಸ್ಥಾನದ ಮುಂದಿನ ಮುಖ್ಯಮಂತ್ರಿ ಎಂಬ ವರದಿಗಳಿಂದ ಕೌರಲಿಯಲ್ಲಿ ಹಿಂಸಾಚಾರ ಸಂಭವಿಸಿರುವಂತೆ ಬೆಂಬಲಿಗರು ಶಾಂತಿ ಕಾಪಾಡುವಂತೆ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಸಚಿನ್ ಪೈಲಟ್ ಮನವಿ ಮಾಡಿಕೊಂಡಿದ್ದಾರೆ.
ನಾಯಕತ್ವದಲ್ಲಿ ನಂಬಿಕೆ ಹೊಂದಿದ್ದು, ರಾಹುಲ್ ಗಾಂಧಿ, ಸೋನಿಯಾಗಾಂಧಿ ನಿರ್ಧಾರವನ್ನು ಸ್ವಾಗತಿಸುವುದಾಗಿ ಅವರು ಹೇಳಿದ್ದಾರೆ. ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ತಲೆಬಾಗುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಟ್ವೀಟರ್ ನಲ್ಲಿ ಸಚಿನ್ ಪೈಲಟ್ ಹೇಳಿದ್ದಾರೆ.
ರಾಜಸ್ಥಾನದ ಮುಖ್ಯಮಂತ್ರಿ ಆಕಾಂಕ್ಷಿಗಳಾದ ಅಶೋಕ್ ಗೆಹ್ಲೋಟ್ , ಸಚಿನ್ ಪೈಲಟ್ ಹಾಗೂ ಮಧ್ಯಪ್ರದೇಶದ ಕಮಲ್ ನಾಥ್, ಜ್ಯೋತಿರಾಧಿತ್ಯ ಸಿಂದಿಯಾ ದೆಹಲಿಯಲ್ಲಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸರ್ಕಾರ ರಚನೆ ಸಂಬಂಧ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಯುಪಿಎ ಅಧಿನಾಯಕಿ ಸೋನಿಯಾಗಾಂಧಿ, ಪ್ರಿಯಾಂಕಾ ಗಾಂಧಿ ಅವರು ಸಹ ಪಾಲ್ಗೊಂಡಿದ್ದರು.
ಮೂರು ರಾಜ್ಯಗಳ ನೂತನ ಚುನಾಯಿತ ಜನಪ್ರತಿನಿಧಿಗಳಿಂದ ಅಭಿಪ್ರಾಯ ಸಂಗ್ರಹಿಸಿದ ಕೇಂದ್ರ ವೀಕ್ಷಕರರನ್ನು ಭೇಟಿ ಮಾಡಿದ ರಾಹುಲ್ ಗಾಂಧಿ , ಸೋನಿಯಾಗಾಂಧಿ ಮುಖ್ಯಮಂತ್ರಿ ಆಯ್ಕೆ ಸಂಬಂಧ ಚರ್ಚೆ ನಡೆಸಿದರು.
ರಾಜಸ್ತಾನ ಮುಖ್ಯಮಂತ್ರಿ ಹೆಸರು ಘೋಷಣೆ ಹಿನ್ನೆಲೆಯಲ್ಲಿ ಸಚಿನ್ ಪೈಲಟ್ ಹಾಗೂ ಅಶೋಕ್ ಗೆಹ್ಲೋಟ್ ನಿವಾಸದ ಮುಂಭಾಗ ಬಿಗಿ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಪರಿಸ್ಥಿತಿ ನಿರ್ವಹಣೆಗಾಗಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಜೈಪುರ ಹೆಚ್ಚುವರಿ ಪೊಲೀಸ್ ಕಮೀಷನರ್ ನಿತಿನ್ ದೀಪ್ ಬ್ಲುಗ್ಗಾನ್ ಹೇಳಿದ್ದಾರೆ.
Advertisement