ಪುಲ್ವಾಮ: ಸೇನೆ ಕಾರ್ಯಾಚರಣೆ ನಂತರ ಭದ್ರತಾ ಪಡೆ ಮತ್ತು ಪ್ರತಿಭಟನಾಕಾರರ ನಡುವೆ ಘರ್ಷಣೆ
ಜಮ್ಮು ಮತ್ತು ಮತ್ತು ಕಾಶ್ಮೀರ ತ್ರಾಲ್ ನಲ್ಲಿ ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಘರ್ಷಣೆ ಎದುರಾಗಿದೆ ಎಂದು ವರದಿಗಳು ತಿಳಿಸಿವೆ...
ಶ್ರೀನಗರ: ಜಮ್ಮು ಮತ್ತು ಮತ್ತು ಕಾಶ್ಮೀರ ತ್ರಾಲ್ ನಲ್ಲಿ ಭದ್ರತಾ ಪಡೆಗಳು 6 ಉಗ್ರರನ್ನು ಹತ್ಯೆ ಮಾಡಿದ ಬೆನ್ನಲ್ಲೇ, ಕಾರ್ಯಾಚರಣೆ ವೇಳೆ ಪ್ರತಿಭಟನಾಕಾರರು ಹಾಗೂ ಭದ್ರತಾ ಪಡೆಗಳ ನಡುವೆ ಭಾರೀ ಘರ್ಷಣೆ ಎದುರಾಗಿದೆ ಎಂದು ವರದಿಗಳು ತಿಳಿಸಿವೆ.
ಉಗ್ರರ ವಿರುದ್ಧ ನಡೆಸಲಾದ ಎನ್'ಕೌಂಟರ್ ಸ್ಥಳಕ್ಕೆ ಬಂದಿರುವ ಕೆಲ ಪ್ರತಿಭಟನಾಕಾರರು ಭದ್ರತಾ ಪಡೆಗಳ ಕಾರ್ಯಾಚರಣೆಗೆ ಅಡ್ಡಿಯುಂಟು ಮಾಡಲು ಕಲ್ಲು ತೂರಾಟ ನಡೆಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರನ್ನು ಹಿಮ್ಮೆಟ್ಟಿಸಲು ಸೇನಾಪಡೆಗಳು ಲಾಠಿ ಚಾರ್ಜ್ ಹಾಗೂ ಅಶ್ರುವಾಯು ಪ್ರಯೋಗ ನಡೆಸಿದ್ದಾರೆಂದು ಮೂಲಗಳು ತಿಳಿಸಿವೆ.
ಈ ನಡುವೆ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಅಧಿಕಾರಿಗಳು ಸ್ಥಳದಲ್ಲಿ ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಿದ್ದಾರೆ.
ಬಹುತೇಕ ಯುವಕರನ್ನು ಹೊಂದಿರುವ ಗುಂಪೊಂದು ಇಂದು ಬೆಳಿಗ್ಗೆ ಎನ್'ಕೌಂಟರ್ ನಡೆದ ಸ್ಥಳಕ್ಕೆ ಬಂದಿದ್ದು, ಇದ್ದಕ್ಕಿದ್ದಂತೆ ಕಲ್ಲು ತೂರಾಟ ನಡೆಸಲು ಆರಂಭಿಸಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭದ್ರತಾ ಪಡೆಗಳು ಹಾಗೂ ಕಲ್ಲು ತೂರಾಟಗಾರರ ನಡುವೆ ಘರ್ಷಣೆ ಏರ್ಪಟ್ಟಿಸುವ ಹಿನ್ನಲೆಯಲ್ಲಿ ಸ್ಥಳೀಯ ಅಂಗಡಿಗಳು ಹಾಗೂ ವ್ಯವಹಾರಗಳು ಸ್ಥಗಿತಗೊಂಡಿವೆ. ರಸ್ತೆಗಳಲ್ಲಿ ವಾಹನಗಳ ಸಂಚಾರ ಕೂಡ ಸಂಪೂರ್ಣವಾಗಿ ಸ್ಥಗಿತಗೊಂಡಿದೆ ಎಂದು ವರದಿಗಳು ತಿಳಿಸಿವೆ.