ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿಯವರ ರಾಜಕಾರಣದ ಶೈಲಿಯು ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವರು ಶುಕ್ರವಾರ ಟೀಕಿಸಿದ್ದಾರೆ.
ಬಿಜೆಪಿ ಸಂಸದೀಯ ಸಭೆ ಇಂದು ಬೆಳಿಗ್ಗೆ ರಾಜಧಾನಿ ದೆಹಲಿಯ 11 ಅಶೋಕ ರಸ್ತೆಯಲ್ಲಿನ ಬಿಜೆಪಿ ಪಕ್ಷದ ಪ್ರಧಾನ ಕಾರ್ಯಾಲಯದಲ್ಲಿ ನಡೆಯಿತು.
ಸಭೆಯಲ್ಲಿ ಮಾತನಾಡಿರುವ ಅಮಿತ್ ಶಾ ಅವರು, ರಾಹುಲ್ ರಾಜಕಾರಣದ ಶೈಲಿ ಪ್ರಜಾಪ್ರಭುತ್ವಕ್ಕೆ ವಿರುದ್ಧವಾಗಿದೆ. ಏಕೆಂದರೆ ಸದನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತನಾಡುವಾಗ ಅವರು ಪದೇ ಪದೇ ಮಧ್ಯೆ ಬಾಯಿ ಹಾಕುತ್ತಾರೆಂದು ಹೇಳಿದ್ದಾರೆಂದು ಬಿಜೆಪಿ ಸಚಿವ ಅನಂತ್ ಕುಮಾರ್ ಹೇಳಿದ್ದಾರೆ.
ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಸತ್ತಿನಲ್ಲಿ ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಭಾಷಣ ಮಾಡಿದ ಹಿನ್ನಲೆಯಲ್ಲಿ ಇಂದು ಪ್ರಧಾನಿ ಮೋದಿ, ಅಮಿತ್ ಶಾ, ಮಾತ್ರವಲ್ಲದೆ ರಾಜನಾಥ ಸಿಂಗ್, ಅರುಣ್ ಜೇಟ್ಲಿ ಮತ್ತು ಅಡ್ವಾಣಿಯವರು ಇಂದು ಭೇಟಿಯಾಗಿ ಮಾತುಕತೆ ನಡೆಸಿದರು.
ಸಭೆಯಲ್ಲಿ ಪ್ರಧಾನಿ ಮೋದಿಯವರು 2019ರ ಮಹಾ ಚುನಾವಣೆಯಲ್ಲಿ ಪಕ್ಷದ ಪ್ರತೀಯೊಬ್ಬರೂ ರೈತರು ಮತ್ತು ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಮಹತ್ವ ನೀಡಿ ಪ್ರಚಾರ ಕಾರ್ಯ ನಡೆಸಬೇಕೆಂದು ತಿಳಿಸಿದ್ದಾರೆಂದು ತಿಳಿದುಬಂದಿದೆ.