ನವದೆಹಲಿ: ದೆಹಲಿ ಮುಖ್ಯಮಂತ್ರಿಗಳ ನಿವಾಸದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಆಪ್ ಶಾಸಕರ ವಿರುದ್ಧ ಮಂಗಳವಾರ ಎಫ್ಐಆರ್ ದಾಖಲಿಸಿದ್ದಾರೆ.
ತಮ್ಮ ಮೇಲಿನ ಹಲ್ಲೆ ಪೂರ್ವ ನಿರ್ಧರಿತ ಸಂಚು ಎಂದು ಆರೋಪಿಸಿರುವ ಅಂಶು ಪ್ರಕಾಶ್ ಅವರು, ಈ ಸಂಬಂಧ ಆಪ್ ಶಾಸಕರ ವಿರುದ್ಧ ದೆಹಲಿ ಪೊಲೀಸರಿಗೆ ದೂರು ನೀಡಿದ್ದಾರೆ.
ಮುಖ್ಯ ಕಾರ್ಯದರ್ಶಿಯ ದೂರಿನ ಆಧಾರದ ಮೇಲೆ ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮತ್ತು ಇತರರ ವಿರುದ್ಧ ಐಪಿಸಿ ಸೆಕ್ಷನ್ 120ಬಿ, 186, 323, 342, 504, 506ರಡಿ ದೆಹಲಿ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ನಿವಾಸದಲ್ಲಿ ಸಭೆ ಆರಂಭವಾಗುತ್ತಿದ್ದಂತೆ ಬಾಗಿಲು ಹಾಕಿದ ಎಎಪಿ ಶಾಸಕರೊಬ್ಬರು, ಶಾಸಕ ಅಮಾನತುಲ್ಲಾ ಖಾನ್ ಹಾಗೂ ಮತ್ತೊಬ್ಬ ಶಾಸಕನ ಮಧ್ಯೆ ಸೋಫಾ ಮೇಲೆ ಕುಳಿತುಕೊಳ್ಳುವಂತೆ ಗದರಿಸಿದರು. ಬಳಿಕ ಟಿವಿ ಜಾಹೀರಾತು ಬಿಡುಗಡೆ ವಿಳಂಬವಾಗುತ್ತಿರುವ ಕುರಿತು ಶಾಸಕರ ಪ್ರಶ್ನೆಗೆ ಉತ್ತರಿಸುವಂತೆ ನನಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಸೂಚಿಸಿದರು. ಅಧಿಕಾರಿಗಳು ಈ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನಿರ್ದೇಶನವನ್ನು ಪಾಲಿಸುತ್ತಿದ್ದಾರೆ ಎಂದು ತಾವು ವಿವರಿಸಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.
ಶಾಸಕರು ತಮ್ಮ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಮುಖ್ಯ ಕಾರ್ಯದರ್ಶಿಯ ಆರೋಪವನ್ನು ಆಮ್ ಆದ್ಮಿ ಪಕ್ಷ ಸ್ಪಷ್ಟವಾಗಿ ತಳ್ಳಿಹಾಕಿದೆ. ಆದರೆ ಈ ಬಗ್ಗೆ ವರದಿ ನೀಡುವಂತೆ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರು ದೆಹಲಿ ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಸೂಚಿಸಿದ್ದಾರೆ.