ದುಬೈ: ದುಬೈ ನಲ್ಲಿ ನಿಧನರಾಗಿರುವ ಬಾಲಿವುಡ್ ನಟಿ ಶ್ರೀದೇವಿ ಅವರ ಪಾರ್ಥಿವ ಶರೀರವನ್ನು ಭಾರತಕ್ಕೆ ತರಲು ಕುಟುಂಬಕ್ಕೆ ಯುಎಇಯಲ್ಲಿರುವ ಭಾರತೀಯ ರಾಯಭಾರಿ ಕಚೇರಿ ನೆರವು ನೀಡಲಿದ್ದು, ಅಲ್ಲಿನ ಅಧಿಕಾರಿ ನವ್ದೀಪ್ ಸಿಂಗ್ ಸೂರಿ ಕುಟುಂಬಕ್ಕೆ ಎಲ್ಲಾ ರೀತಿಯ ನೆರವು ನೀಡುವುದಾಗಿ ಹೇಳಿದ್ದಾರೆ.
ಇತ್ತೀಚಿನ ವರದಿಗಳ ಪ್ರಕಾರ ರಾತ್ರಿ 8 ಗಂಟೆ ವೇಳೆಗೆ ಶ್ರೀದೇವಿ ಅವರ ಪಾರ್ಥಿವ ಶರೀರವನ್ನು ಮುಂಬೈ ಗೆ ತರಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದ್ದು, ಪಾರ್ಥಿವ ಶರೀರವನ್ನು ಭಾರತಕ್ಕೆ ರವಾನಿಸುವ ನಿಟ್ಟಿನಲ್ಲಿ ಕುಟುಂಬದ ಸದಸ್ಯರು ಹಾಗೂ ಸ್ಥಳೀಯ ಅಧಿಕಾರಿಗಳೊಂದಿಗೆ ಸಂಪರ್ಕದಲ್ಲಿರುವುದಾಗಿ ರಾಯಭಾರಿ ಅಧಿಕಾರಿ ತಿಳಿಸಿದ್ದಾರೆ.
ಶ್ರೀದೇವಿ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ರಾಮನಾಥ್ ಕೋವಿಂದ್, ರಜನಿಕಾಂತ್, ಪ್ರಿಯಾಂಕ ಚೋಪ್ರಾ ಸೇರಿದಂತೆ ಚಿತ್ರರಂಗದ ಖ್ಯಾತನಾಮರಾದ ನಟ ನಟಿಯರು ಸಂತಾಪ ಸೂಚಿಸಿದ್ದಾರೆ.