ಮುಂಬೈ : ಭೀಮ-ಕೊರೆಗಾಂವ್ ಹಿಂಸಾಚಾರಕ್ಕೆ ಸಂಬಂಧಪಟ್ಟಂತೆ ಮಹಾರಾಷ್ಟ್ರದಲ್ಲಿ ಬೆಳಗಾವಿಯ ಚಿಕ್ಕೋಡಿ ವಿಭಾಗದ ವಾಯವ್ಯ ಸಾರಿಗೆ ಸಂಸ್ಥೆಯ ಬಸ್ ಗಳ ಸಂಚಾರ ಸ್ಥಗಿತಗೊಂಡಿದೆ. ಮಹಾರಾಷ್ಟ್ರಕ್ಕೆ ತೆರಳುವ ಬಸ್ಸುಗಳ ಸಂಚಾರ ಸ್ಥಗಿತಗೊಂಡಿದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ.
ಈ ಮಧ್ಯೆ ಮಹಾರಾಷ್ಟ್ರದ ಥಾಣೆಯಲ್ಲಿ ಸೆಕ್ಷನ್ 144 ಜಾರಿ ಮಾಡಲಾಗಿದ್ದು ನಾಳೆ ಮಧ್ಯರಾತ್ರಿಯವರೆಗೆ ಜಾರಿಯಲ್ಲಿರುತ್ತದೆ. ಪ್ರತಿಭಟನಾಕಾರರು ಥಾಣೆ ರೈಲು ನಿಲ್ದಾಣದಲ್ಲಿ ರೈಲುಗಳು ಸಂಚರಿಸದಂತೆ ತಡೆದಿದ್ದಾರೆ.
ರಾಜ್ಯದಲ್ಲಿ ನಡೆಯುತ್ತಿರುವ ಬಂದ್ ಹಿನ್ನೆಲೆಯಲ್ಲಿ ಜನರು ಯಾವುದೇ ವದಂತಿಗಳಿಗೆ ಕಿವಿಗೊಡದಂತೆ ಮುಂಬೈ ಪೊಲೀಸರು ನಗರದ ಜನತೆಗೆ ಸಲಹೆ ನೀಡಿದ್ದಾರೆ.
ವದಂತಿಗಳನ್ನು ನಂಬಲು ಅಥವಾ ಸುಳ್ಳುಸುದ್ದಿಗಳನ್ನು ಹಬ್ಬಲು ಹೋಗಬೇಡಿ. ನಿಮ್ಮ ಎಂದಿನ ಕಾರ್ಯದಲ್ಲಿ ತೊಡಗಿ. ಯಾವುದೇ ಅಹಿತಕರ ಘಟನೆ ನಡೆಯದಂತೆ ನೋಡಿಕೊಳ್ಳಲು ಮತ್ತು ಅಸಹಜ ಪರಿಸ್ಥಿತಿ ಎದುರಾದರೆ ಎದುರಿಸಲು ಇಲಾಖೆ ಸಜ್ಜಾಗಿದೆ ಎಂದು ಮುಂಬೈ ಪೊಲೀಸರು ತಿಳಿಸಿದ್ದಾರೆ.