ಆಪ್ ಶಾಸಕರ ಅನರ್ಹತೆಗೆ ಶಿಫಾರಸು: ಚುನಾವಣೆ ಆಯೋಗದ ವರದಿ ಕೇಳಿದ ದೆಹಲಿ ಹೈಕೋರ್ಟ್

ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವ ಬಗ್ಗೆ ವರದಿ ನೀಡುವಂತೆ ದೆಹಲಿ ಹೈಕೋರ್ಟ್...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿರುವ ಬಗ್ಗೆ ವರದಿ ನೀಡುವಂತೆ ದೆಹಲಿ ಹೈಕೋರ್ಟ್ ಶುಕ್ರವಾರ ಚುನಾವಣಾ ಆಯೋಗ ಸೂಚಿಸಿದೆ.
ಲಾಭದಾಯಕ ಹುದ್ದೆ ಹೊಂದಿದ್ದಾರೆ ಎಂಬ ಆರೋಪದ ಮೇಲೆ ದೆಹಲಿ ಆಡಳಿತರೂಢ ಆಮ್ ಆದ್ಮಿ ಪಕ್ಷದ 20 ಶಾಸಕರನ್ನು ಅನರ್ಹಗೊಳಿಸುವಂತೆ ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ್ದು, ಇದನ್ನು ಪ್ರಶ್ನಿಸಿ ಆಪ್ ಶಾಸಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರೇಖಾ ಪಳ್ಳಿ ನೇತೃತ್ವದ ನ್ಯಾಯಪೀಠ, ಶಾಸಕರ ಅನರ್ಹತೆ ಹಾಗೂ ಇತರೆ ವಿಷಯಗಳ ಬಗ್ಗೆ ಸಂಪೂರ್ಣ ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದೆ.
ಚುನಾವಣಾ ಆಯೋಗ ರಾಷ್ಟ್ರಪತಿಗಳಿಗೆ ಶಿಫಾರಸು ಮಾಡಿದ ಕೆಲವೇ ಕ್ಷಣಗಳಲ್ಲಿ ಅನರ್ಹಗೊಂಡ ಆಪ್ ಶಾಸಕರು ಆಯೋಗ ಶಿಫಾರಸು ಪ್ರಶ್ನಿಸಿ ಹಂಗಾಮಿ ಮುಖ್ಯ ನ್ಯಾಯಾಧೀಶೆ ಗೀತಾ ಮಿತ್ತಲ್ ಅವರಿಗೆ ಅರ್ಜಿ ಸಲ್ಲಿಸಿ ತುರ್ತು ವಿಚಾರಣೆ ನಡೆಸುವಂತೆ ಮನವಿ ಮಾಡಿದ್ದರು. ಬಳಿಕ ಅರ್ಜಿಯನ್ನು ನ್ಯಾಯಮೂರ್ತಿ ರೇಖಾ ಪಳ್ಳಿ ಅವರಿಗೆ ವರ್ಗಾಯಿಸಲಾಗಿತ್ತು.
2015ರಲ್ಲಿ ದೆಹಲಿಯ ವಿಧಾನಸಭಾ ಚುನಾವಣೆಯಲ್ಲಿ 70 ಕ್ಷೇತ್ರಗಳಲ್ಲಿ 67ರಲ್ಲಿ ಅಭೂತಪೂರ್ವ ಗೆಲುವು ದಾಖಲಿಸುವ ಮೂಲಕ ಭಾರಿ ಬಹುಮತದೊಂದಿಗೆ ಆಪ್‌ ಸರ್ಕಾರ ರಚನೆಯಾಗಿತ್ತು. ನಂತರ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 21 ಶಾಸಕರನ್ನು ಸಂಸದೀಯ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಿದ್ದರು. ಇದು ಲಾಭದಾಯಕ ಹುದ್ದೆ ಎಂದು ಪರಿಗಣಿಸಿರುವ ಚುನಾವಣಾ ಆಯೋಗ ಅವರ ಶಾಸಕತ್ವವನ್ನು ರದ್ದುಗೊಳಿಸುವಂತೆ ಶಿಫಾರಸು ಮಾಡಿದೆ.
ಒಂದು ವೇಳೆ ರಾಷ್ಟ್ರಪತಿಗಳು ಚುನಾವಣಾ ಆಯೋಗದ ಶಿಫಾರಸನ್ನು ಅಂಗೀಕರಿಸಿದರೂ ಆಪ್‌ ಸರ್ಕಾರದ ಸ್ಥಿರತೆಗೆ ಯಾವುದೇ ಧಕ್ಯೆಯಿಲ್ಲ. 70 ಸದಸ್ಯರ ವಿಧಾಸನಭೆಯಲ್ಲಿ ಬಹುಮತಕ್ಕೆ 36 ಸ್ಥಾನಗಳು ಸಾಕು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com