ದೆಹಲಿ: ಸಿಬಿಐ ವಿಶೇಷ ನ್ಯಾಯಾಧೀಶ ಬಿ.ಹೆಚ್. ಲೋಯಾ ಅವರ ಅನುಮಾನಾಸ್ಪಾದ ಸಾವು ಪ್ರಕರಣದ ವಿಚಾರಣೆಯನ್ನು ಸುಪ್ರೀಂಕೋರ್ಟ್ ಕೈಗೆತ್ತಿಕೊಂಡಿದ್ದು, ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ನೇತೃತ್ವದ ಪೀಠವು ಜನವರಿ 22ರಂದು ಸೋಮವಾರ ವಿಚಾರಣೆ ನಡೆಸಲಿದೆ.
ಈ ಪ್ರಕರಣದ ವಿಚಾರಣೆಗಾಗಿ ಈ ಹಿಂದೆ ರಚಿಸಲಾಗಿದ್ದ ಪೀಠದಲ್ಲಿ ಬದಲಾವಣೆ ಮಾಡಲಾಗಿದ್ದು, ನ್ಯಾಯಮೂರ್ತಿ ಅರುಣ್ ಮಿಶ್ರಾ ಅವರನ್ನು ಹೊರಗಿಡಲಾಗಿದೆ. ಆಯ್ದ ಪ್ರಕರಣಗಳ ವಿಚಾರಣೆ ಸಂಬಂಧ ಇತ್ತೀಚಿಗೆ ಸುಪ್ರೀಂ ಕೋರ್ಟಿನ ನಾಲ್ವರು ಹಿರಿಯ ನ್ಯಾಯಮೂರ್ತಿಗಳು ಸುದ್ದಿಗೋಷ್ಠಿ ನಡೆಸಿ ಅಸಮಾಧಾನ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ಈ ಬದಲಾವಣೆ ಮಾಡಲಾಗಿದೆ ಅಂತಾ ಸುದ್ದಿಸಂಸ್ಥೆಗಳು ವರದಿ ಮಾಡಿವೆ.
ಈ ಸಂಬಂಧ ಕಾಂಗ್ರೆಸ್ ನಾಯಕ ತೇಹ್ ಸೀನ್ ಪೂನಾವಾಲಾ ಹಾಗೂ ಮಹಾರಾಷ್ಟ್ರ ಪತ್ರಕರ್ತ ಬಿ.ಎಸ್. ಲೊನ್ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ, ಹಾಗೂ ನ್ಯಾಯಮೂರ್ತಿಗಳಾದ ಎ.ಎಂ. ಖನ್ವೀಕರ್, ಡಿ. ವೈ. ಚಂದ್ರಚೂಡ್ ಅವರಿದ್ದ ತ್ರಿಸದಸ್ಯ ಪೀಠ, ವಿಚಾರಣೆಯನ್ನು ಜನವರಿ 22ಕ್ಕೆ ಮುಂಡೂಡಿದ್ದು, ವಿಭಾಗೀಯ ಪೀಠದಲ್ಲಿ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ.
ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿದ್ದ ಸಿಬಿಐ ವಿಶೇಷ ನ್ಯಾಯಾಧೀಶ ಲೋಯಾ, ಡಿಸೆಂಬರ್ 1, 2014ರಂದು ನಾಗಪುರದಲ್ಲಿ ಹೃದಯಾಘಾತದಿಂದ ಮೃತಪಟ್ಟಿದ್ದರು.
ಸೋಹ್ರಾಬುದ್ದೀನ್ ಎನ್ ಕೌಂಟರ್ ಪ್ರಕರಣದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ರಾಜಸ್ತಾನ ಗೃಹ ಸಚಿವ ಗುಲಾಬ್ ಚಂದ್ ಕಠಾರಿಯ, ಸೇರಿದಂತೆ ಹಲವು ಮಂದಿ ಪೊಲೀಸ್ ಅಧಿಕಾರಿಗಳನ್ನು ಈಗಾಗಲೇ ಬಿಡುಗಡೆಗೊಳಿಸಿರುವುದನ್ನು ಇಲ್ಲಿ ಸ್ಮರಿಸಬಹುದು.
Advertisement